ನಿಮ್ಮ ಮತಗಳನ್ನು ಮಾರಿಕೊಳ್ಳಬೇಡಿ: ನ್ಯಾ. ಶಾಂತವೀರ ಶಿವಪ್ಪ

ಉಡುಪಿ, ಎ.27: ಮೇ 10ರಂದು ನಡೆಯುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದ್ದಾರೆ.
ಗುರುವಾರ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಸಾರುವ ಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಚುನಾವಣೆಯಲ್ಲಿ ಬಹುತೇಕ ಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆ ಉತ್ತಮ ಯೋಜನೆ ರೂಪಿಸುವ, ಉದ್ಯೋಗ ಸೃಷ್ಟಿಸುವ ಆಲೋಚನೆ ಇರುವ, ಪ್ರಾಮಾಣಿಕ ಮತ್ತು ನೈತಿಕತೆ ಹೊಂದಿರುವ ಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನತೆ ಮತದಾರರ ಪಟ್ಟಿಗೆ ತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದ ಜಿಲ್ಲೆಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದು ಜಿಲ್ಲೆಯ ಎಲ್ಲಾ ಯುವಜನತೆ ತಪ್ಪದೇ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಡುಪಿ ನಗರಸಭೆಯ ಪೌರಾಯುಕ್ತ ರಮೇಶ್ ನಾಯಕ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಇತರರು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಸ್ವಾಗತಿಸಿ ವಂದಿಸಿದರು. ಕಾಲೇಜಿನ 2000ಕ್ಕೂ ಅಧಿಕ ವಿದ್ಯಾರ್ಥಿನಿಯರು ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಎಲೆಕ್ಟ್ರಾನಿಕ್ ಮತಯಂತ್ರ ಹಾಗೂ ವಿವಿಪ್ಯಾಟ್ನ ಸ್ತಬ್ಧಚಿತ್ರವನ್ನು ಒಳಗೊಂಡಿರುವ ಮತದಾನ ಜಾಗೃತಿ ಮೂಡಿಸುವ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ, ಸಾರ್ವಜನಿಕರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಿದೆ.