ಉಡುಪಿ: ಸುಲಿಗೆ ಮಾಡಿದ ಆರೋಪಿಗೆ ಶಿಕ್ಷೆ ಪ್ರಕಟ

ಉಡುಪಿ, ಎ.29: ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಮತ್ತು ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಜೆಎಮ್ಎಫ್ಸಿ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2015ರ ನವೆಂಬರ್ 13ರಂದು ಪ್ರಶಾಂತ್ ಶೆಟ್ಟಿ ಎಂಬಾತ ಉಡುಪಿ ತಾಲೂಕು ಪೆರ್ಣಂಕಿಲ ಗ್ರಾಮದ ಗುಂಡುಪಾದೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಜಲಜಾ ಎಂಬ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 41 ಗ್ರಾಂ ತೂಕದ ಕರಿಮಣಿ ಮತ್ತು ಚಿನ್ನದ ಸರವನ್ನು ಸುಲಿಗೆ ಮಾಡಿರುವ ಬಗ್ಗೆ ಹಿರಿಯಡ್ಕ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿ ಕೊಂಡು, ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ಆರೋಪಿ ಪ್ರಶಾಂತ್ ಶೆಟ್ಟಿಗೆ ಒಂದು ವರ್ಷ ಜೈಲುಶಿಕ್ಷೆ ಮತ್ತು 1000 ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸಾಧಾರಣಾ ಶಿಕ್ಷೆಯನ್ನು ವಿಧಿಸಿ, ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದಾರೆ.