ಮನೆಯಿಂದಲೇ ಮತ ಚಲಾಯಿಸಿದ ಶತಾಯುಷಿಗೆ ಕರೆ ಮಾಡಿ ಅಭಿನಂದಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಬೆಳಗಾವಿ, ಮೇ 2: ಮನೆಯಿಂದಲೇ ಮತದಾನಕ್ಕೆ ಇದೇ ಮೊದಲ ಬಾರಿಗೆ ಅವಕಾಶ ಕಲ್ಪಿಸಿದ್ದ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ 103 ವರ್ಷದ ವಯೋವೃದ್ಧ ಮಹದೇವ ಮಹಾಲಿಂಗ ಮಾಳಿ ತಮ್ಮ ಮನೆಯಿಂದಲೇ ಮತವನ್ನು ಚಲಾಯಿಸಿದ್ದು, ಅವರಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಶತಾಯುಷಿ ಮಹದೇವ ಅವರು ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿರುವುದನ್ನು ಗಮನಿಸಿದ ರಾಜೀವ್ ಕುಮಾರ್ ಅವರು, ಇಂದು ಮಧ್ಯಾಹ್ನ ಮಹದೇವ ಮಾಳಿ ಅವರಿಗೆ ಸ್ವತಃ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದರು. ಪ್ರಜಾಪ್ರಭುತ್ವದ ಹಬ್ಬವಾಗಿರುವ ಮತದಾನ ಪ್ರಕ್ರಿಯೆಯಲ್ಲಿ ಯುವ ಮತದಾರರು ಹಾಗೂ ನಗರದ ಮತದಾರರು ಭಾಗವಹಿಸಲು ಮಹದೇವ ಮಾಳಿ ಅವರು ಸ್ಫೂರ್ತಿಯಾಗಿದ್ದಾರೆ. ಹಿರಿಯ ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಭಾರತದ ಬುನಾದಿಯನ್ನು ಗಟ್ಟಿಗೊಳಿಸಿದ್ದಾರೆ ಎಂದು ಹೇಳಿದರು.
ಮನೆಯಿಂದಲೇ ಮತದಾನ ಮಾಡಿದ ಮಹಾದೇವ ಮಾಳಿ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಎಷ್ಟೊಂದು ಅಮೂಲ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ’ ಎಂದು ರಾಜೀವ್ ಕುಮಾರ್ ಹೇಳಿದರು. ಆಯೋಗವು ಪ್ರತಿಯೊಬ್ಬರ ಒಳಗೊಳ್ಳುವಿಕೆ ಮತ್ತು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸುವುದಕ್ಕೆ ಬದ್ಧವಾಗಿದೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟಿರುವ 7362ಕ್ಕೂ ಅಧಿಕ ಜನರು ಹಾಗೂ 1708 ವಿಕಲಚೇತನರು ಮನೆಯಿಂದಲೇ ಮತದಾನ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಎ.29 ರಿಂದ ಆರಂಭಗೊಂಡಿರುವ ಮತದಾನ ಪ್ರಕ್ರಿಯೆಯಲ್ಲಿ ಇದುವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 6975 ಹಿರಿಯರು ಮತ್ತು 1661 ವಿಕಲಚೇತನರು ಮನೆಯಿಂದಲೇ ತಮ್ಮ ಮತವನ್ನು ಚಲಾಯಿಸಿರುತ್ತಾರೆ ಎಂದು ರಾಜೀವ್ ಕುಮಾರ್ ತಿಳಿಸಿದರು.
ಆಯೋಗಕ್ಕೆ ಕೃತಜ್ಞತೆ ಸಲ್ಲಿಸಿದ ಶತಾಯುಷಿ: ಸ್ವತಃ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರೇ ದೂರವಾಣಿ ಕರೆ ಮಾಡಿದಾಗ ಅತ್ಯಂತ ಸಂತೋಷದಿಂದ ಅವರೊಡನೆ ಮಾತನಾಡಿದ ಮಹದೇವ ಮಾಳಿ, ‘ತಮ್ಮಂತಹ ಹಿರಿಯರಿಗೆ ಇದೇ ಪ್ರಥಮ ಬಾರಿ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದ ಚುನಾವಣಾ ಆಯೋಗಕ್ಕೆ ಕೃತಜ್ಞತೆಗಳು. ಈ ಹಿಂದೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಇಲ್ಲದಿರುವಾಗ ಗಾಲಿ ಕುರ್ಚಿಯಲ್ಲಿ ಮತಗಟ್ಟಿಗೆ ತೆರಳಿ ಮತದಾನ ಮಾಡಿರುವುದನ್ನು ನೆನಪಿಸಿಕೊಂಡರು.
ಚುನಾವಣೆಯಲ್ಲಿ ಎಲ್ಲ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧಕ್ಷ ಹರ್ಷಲ್ ಭೋಯರ್, ಚಿಕ್ಕೋಡಿ-ಸದಲಾಗಾ ಚುನಾವಣಾಧಿಕಾರಿ ಮಾಧವ್ ಗಿತ್ತೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







