ಕರ್ನಾಟಕದ ಚುನಾವಣಾ ರ್ಯಾಲಿಯಲ್ಲಿ ಪ್ರಚೋದನಕಾರಿ ಹೇಳಿಕೆ: ಅಮಿತ್ ಶಾ ವಿರುದ್ಧ ಬಿಹಾರದಲ್ಲಿ ಪ್ರಕರಣ ದಾಖಲು
ದರ್ಭಾಂಗ್, ಮೇ 3: ವಿಧಾನ ಸಭೆ ಚುನಾವಣೆ ನಡೆಯಲಿರುವ ಕರ್ನಾಟಕದಲ್ಲಿ ತಮ್ಮ ಹೇಳಿಕೆಗಳ ಮೂಲಕ ಕೋಮು ಉದ್ವಿಗ್ನತೆ ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಬಿಹಾರದ ದರ್ಭಾಂಗ್ ಜಿಲ್ಲೆಯ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ಹಯಾಘಾಟ್ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ನ ಚುನಾವಣಾ ಉಸ್ತುವಾರಿಯಾಗಿರುವ ಪ್ರತಿಭಾ ಸಿಂಗ್ ಅವರು ದರ್ಭಾಂಗ್ನ ಚೀಫ್ ಜುಡೀಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಈ ದೂರು ದಾಖಲಿಸಿದ್ದಾರೆ.
ಎಪ್ರಿಲ್ 25ರಂದು ಕರ್ನಾಟಕದ ಬೆಳಗಾವಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಅಮಿತ್ ಶಾ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಗಲಭೆಗಳು ನಡೆಯುತ್ತವೆ ಎಂಬ ಹೇಳಿಕೆಗೆ ಸಂಬಂಧಿಸಿ ಈ ಪ್ರಕರಣ ದಾಖಲಿಸಲಾಗಿದೆ.
‘‘ಅಮಿತ್ ಶಾ ಅವರು ತಮ್ಮ ಭಾಷಣದ ಮೂಲಕ ದ್ವೇಷ ಹಾಗೂ ಕೋಮು ಉದ್ವಿಗ್ನತೆ ಹರಡುವ ಪ್ರಯತಿಸುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ ಗಲಭೆಗಳು ನಡೆಯುತ್ತವೆ ಎಂದು ಅವರು ಹೇಳಿದ್ದಾರೆ. ಇದು ಪ್ರಚೋದನಕಾರಿ ಭಾಷಣ. ಆದುದರಿಂದ ನಾವು ಅವರ ವಿರುದ್ಧ ಭಾರತೀಯ ದಂಡ ಸಂಹಿತೆ 153, 502(2) ಹಾಗೂ 506ರ ಅಡಿಯಲ್ಲಿ ಪ್ರಕರಣ (ಸಂಖ್ಯೆ-490/23)ವನ್ನು ದಾಖಲಿಸಿದ್ದೇವೆ’’ ಎಂದು ಸಿಂಗ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಕೋಮ ಸಾಮರಸ್ಯವನ್ನು ಕದಡಲು ಅಮಿತ್ ಶಾ ಅವರು ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಾ ಸಿಂಗ್ ತಿಳಿಸಿದ್ದಾರೆ.