ಡಿಎಂಕೆ ಸಂಸದೆ ಕನಿಮೊಳಿ ಲೋಕಸಭೆಗೆ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: 2019ರಲ್ಲಿ ತಮಿಳುನಾಡಿನ ತೂತುಕುಡಿ ಕ್ಷೇತ್ರದಿಂದ ಡಿಎಂಕೆ ಸಂಸದೆ ಕನಿಮೊಳಿ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.
ತಮ್ಮ ವಿರುದ್ಧದ ಅರ್ಜಿಯನ್ನು ವಜಾಗೊಳಿಸಲು ನಿರಾಕರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಕನಿಮೊಳಿ ಪ್ರಶ್ನಿಸಿದ್ದರು.
"ಚುನಾವಣಾ ಅರ್ಜಿಯನ್ನು ವಜಾಗೊಳಿಸಲಾಗಿದೆ. ಮೇಲ್ಮನವಿಯನ್ನು ಅನುಮತಿಸಲಾಗಿದೆ" ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ಪೀಠ ಹೇಳಿದೆ.
ಕುಟುಂಬದ ಆಸ್ತಿಯನ್ನು ಬಹಿರಂಗಪಡಿಸುವ ಚುನಾವಣಾ ಅಫಿಡವಿಟ್ನಲ್ಲಿ ಕನಿಮೊಳಿ ತನ್ನ ಪತಿಯ ಪ್ಯಾನ್ ಸಂಖ್ಯೆಯನ್ನು ನಮೂದಿಸಲು ವಿಫಲವಾದ ಕಾರಣ ಎ. ಸನಾತನ ಕುಮಾರ್ ಎಂಬ ಮತದಾರರು ಕನಿಮೊಳಿ ಅವರ ಆಯ್ಕೆಯನ್ನು ಪ್ರಶ್ನಿಸಿದ್ದರು.
ಕನಿಮೊಳಿ ಲೋಕಸಭೆಗೆ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಮತದಾರ ಮತ್ತು ಬಿಜೆಪಿ ನಾಯಕರೊಬ್ಬರು ಪ್ರತ್ಯೇಕವಾಗಿ ಸಲ್ಲಿಸಿದ್ದ ಎರಡು ಚುನಾವಣಾ ಅರ್ಜಿಗಳನ್ನು ವಜಾಗೊಳಿಸುವಂತೆ ಕೋರಿ ಕನಿಮೊಳಿ ಸಲ್ಲಿಸಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಈ ಹಿಂದೆ ತಿರಸ್ಕರಿಸಿತ್ತು.