ಜಮೀನು ಅಡವಿಟ್ಟು ವಿವಾಹ ಮಾಡಿದರೂ ತಂದೆಯ ಆಸ್ತಿಯಲ್ಲಿ ಮಗಳಿಗೆ ಸಮಾನ ಹಕ್ಕಿದೆ: ಹೈಕೋರ್ಟ್

ಬೆಂಗಳೂರು, ಮೇ 4: ಜಮೀನು ಅಡಮಾನ ಇಟ್ಟು ಮದುವೆ ಮಾಡಿದರೂ ತಂದೆಯ ಆಸ್ತಿಯಲ್ಲಿ ಮಗಳಿಗೂ ಸಮಾನ ಹಕ್ಕಿದೆ ಎಂದು ಹೈಕೋರ್ಟ್ ತಿಳಿಸಿದೆ.
ತುಮಕೂರು ಜಿಲ್ಲೆಯ ಯಲ್ಲಾಪುರ ಗ್ರಾಮದ ನಿವಾಸಿಗಳಾದ ವೆಂಕಟೇಶ ಮತ್ತು ಅವರ ತಾಯಿ ವೆಂಕಟಲಕ್ಷ್ಮಮ್ಮ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಆದೇಶ ನೀಡಿದೆ.
ತಂದೆಯ ಜಮೀನು ಅಡಮಾನವಿಟ್ಟು ಸಹೋದರಿಗೆ ಮದುವೆ ನೆರವೇರಿಸಿದ್ದು, ಚಿನ್ನಾಭರಣ ಸಹ ಕೊಡಿಸಿದ್ದಾರೆ. ಬಳಿಕ ತಂದೆಯ ಸಾಲ ತೀರಿಸಿ, ಜಮೀನು ಹಿಂದಕ್ಕೆ ಪಡೆಯಲಾಗಿದೆ. ಹೀಗಾಗಿ, ಸಹೋದರಿಗೆ ತಂದೆಯ ಆಸ್ತಿ ಮೇಲೆ ಸಮಾನ ಹಕ್ಕು ಇಲ್ಲ ಮತ್ತು ಆಕೆಗೆ ಆಸ್ತಿಯಲ್ಲಿ ಪಾಲು ಕೊಡಲಾಗದು ಎಂಬ ವಾದ ತಿರಸ್ಕರಿಸಿದ ಹೈಕೋರ್ಟ್, ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಗೂ ಸಮಾನ ಪಾಲಿದೆ ಎಂದು ಆದೇಶಿಸಿತು.
ಪ್ರಕರಣವೇನು?: ತುಮಕೂರಿನ ಯಲ್ಲಾಪುರ ಗ್ರಾಮದ ನಿವಾಸಿಯಾಗಿದ್ದ ಕಲಗಿರಿಯಪ್ಪ ಎಂಬುವರಿಗೆ ಲಕ್ಷ್ಮೀದೇವಮ್ಮ ಮತ್ತು ಕೆ.ಗೋವಿಂದಯ್ಯ ಎಂಬ ಮಕ್ಕಳು ಇದ್ದರು. ತಂದೆಯ ಆಸ್ತಿಯಲ್ಲಿ ಪಾಲು ಕೋರಿ 2011ರಲ್ಲಿ ಸಿವಿಲ್ ದಾವೆ ಹೂಡಿದ್ದ ಲಕ್ಷ್ಮೀದೇವಮ್ಮ, ತಂದೆ ಕಲಗಿರಿಯಪ್ಪ ಅವರ ಹೆಸರಿನಲ್ಲಿ 1943ರಿಂದ 1949ವರೆಗೆ ವಿವಾದಿತ ಜಮೀನು ನೋಂದಣಿಯಾಗಿದೆ. 1964ರಲ್ಲಿ ತಂದೆ ಮೃತಪಟ್ಟಿದ್ದಾರೆ. ತಂದೆಯ ಆಸ್ತಿಯು ಸಹೋದರ ಗೋವಿಂದಯ್ಯನ ಸ್ವಾಧೀನದಲ್ಲಿದೆ. ಸಹೋದರ ಸಹ ಸಾವನ್ನಪ್ಪಿದ್ದು, ಆತನ ಪತ್ನಿ ಮತ್ತು ಮಕ್ಕಳು ಆಸ್ತಿ ಅನುಭವಿಸುತ್ತಿದ್ದಾರೆ. ಹೀಗಾಗಿ, ಆಸ್ತಿಯಲ್ಲಿ ತನಗೂ ಪಾಲು ನೀಡುವಂತೆ ಸಹೋದರನ ಪುತ್ರ ಮತ್ತು ಪತ್ನಿಗೆ (ಮೇಲ್ಮನವಿದಾರರು) ಆದೇಶಿಸಬೇಕು ಎಂದು ಕೋರಿದ್ದರು.
ದಾವೆಯ ವಿಚಾರಣೆ ನಡೆಸಿದ್ದ ಸಿವಿಲ್ ನ್ಯಾಯಾಲಯ, ಲಕ್ಷ್ಮೀದೇವಮ್ಮಗೆ ಅವರ ತಂದೆಯ ಆಸ್ತಿಯಲ್ಲಿ ಪಾಲು ಇದೆ ಎಂದು 2018ರಲ್ಲಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಗೋವಿಂದಯ್ಯ ಪುತ್ರ ವೆಂಕಟೇಶ್ ಮತ್ತು ಪತ್ನಿ ವೆಂಕಟಲಕ್ಷ್ಮಮ್ಮ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ಮೇಲ್ಮನವಿದಾರ ಪರ ವಕೀಲರು, 1963ರಲ್ಲಿ ಲಕ್ಷ್ಮೀದೇವಮ್ಮ ಅವರಿಗೆ ಮದುವೆ ಮಾಡಲಾಗಿದೆ. ಕಲಗಿರಿಯಪ್ಪ ಅವರು 1964ರಲ್ಲಿ ಸಾವನ್ನಪ್ಪಿದ್ದರು. ಅವರ ಪುತ್ರ ಗೋವಿಂದಯ್ಯ ಅವರಿಗೆ ಉತ್ತರಾಧಿಕಾರಿಯಾಗಿದ್ದರು. ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಎಕರೆ ಜಮೀನನ್ನು ಕಲಗಿರಿಯಪ್ಪ ಅಡಮಾನವಿಟ್ಟು ಸಾಲ ಪಡೆದಿದ್ದರು. ಆ ಸಾಲದಲ್ಲೇ ಲಕ್ಷ್ಮೀದೇವಮ್ಮ ಅವರಿಗೆ ಮದುವೆ ಮಾಡಲಾಗಿತ್ತು. ಆಕೆಗೆ ಚಿನ್ನಾಭರಣ ಸೇರಿದಂತೆ ಸಾಕಷ್ಟು ಬೆಲೆಬಾಳುವ ವಸ್ತುಗಳನ್ನು ನೀಡಿದ್ದಾರೆ. ಲಕ್ಷ್ಮೀದೇವಮ್ಮ ಮದುವೆಯಾದ ಕೂಡಲೇ ಅವರು ಅವಿಭಕ್ತ ಕುಟುಂಬದ ಸದಸ್ಯರಾಗುತ್ತಾರೆ ಎಂದು ತಿಳಿಸಿದ್ದರು.
ಅಲ್ಲದೆ, 1971ರಲ್ಲಿ ಗೋವಿಂದಯ್ಯ ಪೊಲೀಸ್ ಇಲಾಖೆ ಸೇವೆಗೆ ಸೇರಿದ್ದರು. ನಂತರ ಸಾಲ ತೀರಿಸದ ಕಾರಣ ಆಸ್ತಿಯನ್ನು ಹರಾಜಿಗೆ ಇಡಲಾಗಿತ್ತು. ಸಾಲವನ್ನು ಗೋವಿಂದಯ್ಯ ತೀರಿಸಿ, ಆಸ್ತಿಯನ್ನು ದಕ್ಕಿಸಿಕೊಂಡಿದ್ದರು. ಇದರಿಂದ ಜಮೀನನ್ನು ಗೋವಿಂದಯ್ಯ ಅವರೇ ಸ್ವತಃ ಸಂಪಾದಿಸಿದಂತೆ ಆಗುತ್ತದೆ. ಆದ್ದರಿಂದ ಲಕ್ಷ್ಮೀದೇವಮ್ಮ ಅವರಿಗೆ ಆಸ್ತಿ ಮೇಲೆ ಹಕ್ಕು ಸೃಷ್ಟಿಯಾಗುವುದಿಲ್ಲ ಎಂದು ವಾದ ಮಂಡಿಸಿದ್ದರು.







