ಮಂಗಳೂರು: ಮತದಾನದ ಜಾಗೃತಿಗೆ ಮಾನವ ಸರಪಳಿ

ಮಂಗಳೂರು, ಮೇ 7: ಯುವ ಜನರೇ ಈ ದೇಶದ ಸಂಪತ್ತು. ಮೇ 10ರಂದು ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಪ್ರಜ್ಞಾವಂತಿಕೆ, ಬುದ್ಧಿವಂತಿಕೆ ಹಾಗೂ ವಿಶ್ಲೇಷಣಾತ್ಮಕತೆಯಿಂದ ತಮ್ಮ ಹಕ್ಕು ಚಲಾಯಿಸಿ ಸಮರ್ಥ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆಗಿರುವ ದ.ಕ.ಜಿಪಂ ಸಿಇಒ ಡಾ. ಕುಮಾರ್ ಕರೆ ನೀಡಿದರು.
ದ.ಕ.ಜಿಲ್ಲಾ ಸ್ವೀಪ್ ಸಮಿತಿ, ದ.ಕ. ಜಿಲ್ಲಾಡಳಿತ, ಜಿಪಂ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ರವಿವಾರ ನಗರದ ಲಾಲ್ಬಾಗ್ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ಆವರಣದಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆಗೆ’ ಜಾಥಾಕ್ಕೆ ಹಾಗೂ ಮಾನವ ಸರಪಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
95 ವರ್ಷದ ಹಿರಿಯ ನಾಗರಿಕ ರಾಮಯ್ಯ ನಮ್ಮೊಂದಿಗಿದ್ದಾರೆ. ಮತದಾನದ ಮಹತ್ವವನ್ನು ತಿಳಿಸಿಕೊಡಲು ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಆದ ಕಾರಣ ಯುವಜನತೆ ಅವರಿಂದ ಸ್ಪೂರ್ತಿ ಪಡೆಯಬೇಕು ಹಾಗೂ ಮೇ 10ರಂದು ನಡೆಯುವ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಡಗರ ಹಾಗೂ ಸಂಭ್ರಮದಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಡಾ. ಕುಮಾರ್ ಹೇಳಿದರು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್. ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚೆನ್ನಬಸಪ್ಪ, ಮುಡಾ ಆಯುಕ್ತ ಡಾ. ಭಾಸ್ಕರ್, ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಇಂಜಿನಿಯರಿಂಗ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ವಿಷ್ಣು ಮಯ್ಯ, ಮಂಗಳೂರು ವಿಭಾಗದ ಅಧ್ಯಕ್ಷ ಸತ್ಯ ರಂಜನ್ ರಾವ್ ಮತ್ತಿತರರು ಪಾಲ್ಗೊಂಡಿದ್ದರು.
ಈ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆ ವೃತ್ತದಲ್ಲಿ ಬೃಹತ್ ಮಾನವ ಸರಪಳಿಯನ್ನು ರಚಿಸಲಾಯಿತು. ಅಲ್ಲದೆ ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿದ ಜಾಥಾವು ಮತದಾನದ ಬಗ್ಗೆ ಜಾಗೃತಿ ಮೂಡಿಸಿತು.
