ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ 'ಧಾರ್ಮಿಕ ಘೋಷಣೆ' ಮಾಡುತ್ತಿರುವುದನ್ನು ಕಂಡು ಅಚ್ಚರಿಯಾಗಿದೆ: ಶರದ್ ಪವಾರ್
ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಧಾರ್ಮಿಕ ಘೋಷಣೆ ಮಾಡುತ್ತಿರುವುದನ್ನು ಕಂಡು ಅಚ್ಚರಿಯಾಗಿದೆ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಪ್ರಸ್ತಾಪಿಸಿದಾಗ ವಿಭಿನ್ನ ಬಗೆಯ ವಾತಾವರಣ ನಿರ್ಮಾಣವಾಗುತ್ತದೆ. ಇದು ಅಷ್ಟು ಸರಿಯಲ್ಲ ಎಂದು ಸ್ಥಳೀಯ ವಾಹಿನಿಯೊಂದರೊಂದಿಗೆ ಮಾತನಾಡುತ್ತಾ ಶರದ್ ಪವಾರ್ ಅಭಿಪ್ರಾಯ ಪಟ್ಟಿದ್ದಾರೆ.
ಇದಕ್ಕೂ ಮುನ್ನ ರವಿವಾರ ಪಂಢರಾಪುರ ದೇವಾಲಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಪವಾರ್, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಪ್ರತಿಪಾದಿಸಿದ್ದರು.
"ನಾವು ಚುನಾವಣೆಯಲ್ಲಿ ಸ್ಪರ್ಧಿಸುವಾಗ ಸಾಂವಿಧಾನಿಕ ಮೌಲ್ಯ ಹಾಗೂ ಜಾತ್ಯತೀತತೆಯ ಮೇಲೆ ಪ್ರಮಾಣ ಮಾಡಿ ಸ್ಪರ್ಧಿಸಿರುತ್ತೇವೆ" ಎಂದು ಪವಾರ್ ಟಿವಿ9 ಮರಾಠಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
"ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಧಾರ್ಮಿಕ ಘೋಷಣೆಗಳನ್ನು ಮಾಡಿದ್ದಾರೆ ಎಂಬ ಸಂಗತಿ ತಿಳಿದು ಅಚ್ಚರಿಗೊಂಡಿದ್ದೇನೆ. ನಾವು ಜಾತ್ಯತೀತ ಪರಿಕಲ್ಪನೆಯನ್ನು ಅಂಗೀಕರಿಸಿದ್ದೇವೆ. ಚುನಾವಣಾ ಸಂದರ್ಭದಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯಗಳನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ಬಗೆಯ ವಾತಾವರಣವನ್ನು ನಿರ್ಮಿಸುತ್ತದೆ. ಇದು ಅಷ್ಟು ಒಳ್ಳೆಯ ಸಂಗತಿಯಲ್ಲ" ಎಂದು ಅಭಿಪ್ರಾಯ ಪಟ್ಟಿದ್ದಾರೆ.