ವಿಧಾನ ಸಭಾ ಚುನಾವಣೆ; ದ.ಕ.ಜಿಲ್ಲೆಯಲ್ಲಿ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು, ಮೇ 9: ರಾಜ್ಯ ವಿಧಾನ ಸಭಾ ಚುನಾವಣೆಗೆ ಮೇ 10ರಂದು ನಡೆಯುವ ಮತದಾನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ವೇತನ ಸಹಿತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು ಔದ್ಯಮಿಕ ಸಂಸ್ಥೆಗಳು, ಅಪಾರ್ಟ್ಮೆಂಟ್ಗಳಲ್ಲಿರುವ ವಲಸೆ ಕಾರ್ಮಿಕರು, ಹೊಟೇಲ್, ಬಾರ್, ಹೋಂಸ್ಟೇಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು, ಕೈಗಾರಿಕಾ ಉದ್ಯಮ ಮಾಹಿತಿ ತಂತ್ರಜ್ಞಾನ ಕಂಪೆನಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮತ್ತಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರಾತಿನಿಧ್ಯ ಕಾಯ್ದೆಯಡಿ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ, ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಚುನಾವಣಾ ಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.





