ಸಕ್ಕರೆ ಕಾರ್ಖಾನೆ ಮಾಲಕರಿಗೆ ಸಚಿವ ಸ್ಥಾನ ನೀಡಬೇಡಿ; ರಾಜ್ಯಪಾಲರಿಗೆ ರೈತ ಸಂಘ ಮನವಿ

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲಕರು ಸಚಿವ ಸಂಪುಟಕ್ಕೆ ಸೇರುವುದನ್ನು ತಪ್ಪಿಸಿ, ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ ಎಂದು ಹೊಸ ಸರ್ಕಾರಕ್ಕೆ ಸೂಚನೆ ಕೊಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರೈತ ಮುಖಂಡರು ಮನವಿ ಸಲ್ಲಿಕೆ ಮಾಡಿದ್ದಾರೆ.
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರು ಮಂಗಳವಾರ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು. ಜತೆಗೆ ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆಯೂ ಮನವಿ ಮಾಡಿದರು
.“ಸಕ್ಕರೆ ಕಾರ್ಖಾನೆ ಮಾಲೀಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಬೇಡ. ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು. ರಸಗೊಬ್ಬರಗಳ ಬೆಲೆ ಇಳಿಕೆ ಮಾಡಬೇಕು. ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೊರ್ ಕೇಳುವುದು ಬೇಡ. ಹಾಗೆಯೇ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು” ಎಂಬುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಲು ಸೂಚಿಸುವಂತೆ ರಾಜ್ಯಪಾಲರಿಗೆ ರೈತ ಮುಖಂಡರು ಒತ್ತಾಯಿಸಿದರು.
ನಂತರ ರೈತ ಮುಖಂಡರ ಎಲ್ಲ ಒತ್ತಾಯಗಳ ಬಗ್ಗೆ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭರವಸೆ ನೀಡಿದರು.
ಮನವಿ ಪತ್ರ ನೀಡಿ ವಿವರವಾಗಿ ಸಮಸ್ಯೆ ತಿಳಿಸಿದ ಕುರುಬೂರು ಶಾಂತಕುಮಾರ್, “ರಾಜ್ಯದಲ್ಲಿರುವ 78 ಸಕ್ಕರೆ ಕಾರ್ಖಾನೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳ ಶಾಸಕರು ಮಾಲೀಕರು ಇರುವ ಕಾರಣ ಯಾವುದೇ ಸರ್ಕಾರ ಬಂದರೂ ಸಚಿವ ಸಂಪುಟದಲ್ಲಿ ಸೇರುವುದರಿಂದ 30 ಲಕ್ಷ ಕಬ್ಬು ಬೆಳೆಗಾರರ ರೈತರಿಗೆ ಸಂಕಷ್ಟ ಅನುಭವಿಸುವಂತಾಗಿದೆ” ಎಂದು ಆರೋಪಿಸಿದರು.
“ಹಿಂದಿನ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರವನ್ನು 150 ರೂಪಾಯಿ ಏರಿಕೆ ಮಾಡಿ ಆದೇಶ ಹೊರಡಿಸಲಾಗಿತ್ತು. ಇದಕ್ಕೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ತಂದು ಹೆಚ್ಚುವರಿ ಹಣ ಪಾವತಿಸದೆ ರೈತರನ್ನು ಸಂಕಷ್ಟಕ್ಕೆ ತಳಿದ್ದಾರೆ” ಎಂದು ದೂರಿದರು.






.jpeg)


