ದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ತಂದಿರುವ ಮೂರು ಚಿರತೆಗಳ ಸಾವು: ಸುಪ್ರೀಂಕೋರ್ಟ್ ತೀವ್ರ ಕಳವಳ
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ (ಕೆಎನ್ಪಿ) ಸ್ಥಳಾಂತರಗೊಂಡ ಎರಡು ತಿಂಗಳೊಳಗೆ ಮೂರು ಚಿರತೆಗಳು ಸಾವನ್ನಪ್ಪಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.
ಚಿರತೆಗಳನ್ನು ರಾಜಸ್ಥಾನಕ್ಕೆ ಸ್ಥಳಾಂತರಿಸುವ ಕುರಿತು ಪರಿಗಣಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಹಾಗೂ ಸಂಜಯ್ ಕರೋಲ್ ಅವರನ್ನೊಳಗೊಂಡ ನ್ಯಾಯಪೀಠವು, ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಇಷ್ಟು ದೊಡ್ಡ ಸಂಖ್ಯೆಯ ಚಿರತೆಗಳಿಗೆ ಕುನೊ ರಾಷ್ಟ್ರೀಯ ಉದ್ಯಾನವನ ಸಾಕಾಗುವುದಿಲ್ಲ ಎಂದು ತೋರುತ್ತಿದೆ ಹಾಗೂ ಸರಕಾರವು ಅವುಗಳನ್ನು ಇತರ ಅಭಯಾರಣ್ಯಗಳಿಗೆ ಸ್ಥಳಾಂತರಿಸಲು ಪರಿಗಣಿಸಬಹುದು ಎಂದು ಕೇಂದ್ರ ಸರಕಾರಕ್ಕೆ ತಿಳಿಸಿದೆ.
“ಎರಡು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಮೂರು ಚಿರತೆಗಳ ಸಾವುಗಳು ಗಂಭೀರ ಕಳವಳಕಾರಿ ವಿಷಯವಾಗಿದೆ. ಮಾಧ್ಯಮಗಳಲ್ಲಿ ತಜ್ಞರ ಅಭಿಪ್ರಾಯಗಳು ಹಾಗೂ ಲೇಖನಗಳಿವೆ. ಎಷ್ಟೋ ಚಿರತೆಗಳಿಗೆ ಕುನೋ ಉದ್ಯಾನವನ ಸಾಕಾಗುವುದಿಲ್ಲ ಎಂದು ತೋರುತ್ತದೆ. ಒಂದೇ ಸ್ಥಳದಲ್ಲಿ ಚಿರತೆಗಳ ಹೆಚ್ಚಿನ ಸಾಂದ್ರತೆಯಿದೆ. ನೀವು ರಾಜಸ್ಥಾನದಲ್ಲಿ ಸೂಕ್ತವಾದ ಸ್ಥಳವನ್ನು ಏಕೆ ಹುಡುಕಬಾರದು? ರಾಜಸ್ಥಾನದಲ್ಲಿ ವಿರೋಧ ಪಕ್ಷದ ಆಡಳಿತವಿದೆ ಎಂದ ಮಾತ್ರಕ್ಕೆ ನೀವು ಅದನ್ನು ಪರಿಗಣಿಸುವುದಿಲ್ಲ ಎನ್ನುವುದರಲ್ಲಿ ಅರ್ಥವಿಲ್ಲ” ಎಂದು ನ್ಯಾಯ ಪೀಠ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.
ಇತರ ಅಭಯಾರಣ್ಯಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಎಲ್ಲಾ ಸಂಭಾವ್ಯ ಅಂಶಗಳ ಬಗ್ಗೆ ಟಾಸ್ಕ್ ಫೋರ್ಸ್ ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸರಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು ಸುಪ್ರೀಂ ಕೋರ್ಟ್ಗೆ ತಿಳಿಸಿದರು.