ಇನ್ನೊಂದು ಧರ್ಮೀಯನನ್ನು ಪ್ರೀತಿಸಿದ ಯುವತಿಗೆ ತನ್ನಿಷ್ಟದ ಸ್ಥಳದಲ್ಲಿ ನೆಲೆಸಲು ಅವಕಾಶ ಕಲ್ಪಿಸಿದ ಹೈಕೋರ್ಟ್

ಬೆಂಗಳೂರು: ಇನ್ನೊಂದು ಧರ್ಮದ ಯುವಕನನ್ನು ಪ್ರೀತಿಸಿರುವ ಯುವತಿಗೆ ಈಗ ತನ್ನಿಷ್ಟವಾದ ಸ್ಥಳದಲ್ಲಿ ನೆಲೆಸುವುದಕ್ಕೆ ಹೈಕೋರ್ಟ್ ಅವಕಾಶ ನೀಡಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲೆಯ ಯುವತಿಯೊಬ್ಬಳನ್ನು ಆಕೆಯ ಪಾಲಕರು ಅಕ್ರಮ ಬಂಧನದಲ್ಲಿಟ್ಟಿದ್ದಾರೆಂದು ಆರೋಪಿಸಿ ಯುವಕನೊಬ್ಬ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಅವಕಾಶ ಕಲ್ಪಿಸಿದೆ.
ಇದೇ ಯುವತಿಗೆ ಸಂಬಂಧಿಸಿದಂತೆ 2023ರ ಮೇ 11ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಯುವತಿಗೆ ಮೇ 16ರ ವರೆಗೆ ಪುನರ್ವಸತಿ ಕೇಂದ್ರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿತ್ತು. ಮೇ 16ರಂದು ಅರ್ಜಿ ಮತ್ತೆ ವಿಚಾರಣೆಗೆ ಬಂದಾಗ ಯುವತಿ ಹಾಜರಾಗಿ, ತನಗೆ 24 ವರ್ಷವಾಗಿದೆ. ತಾನು ವಯಸ್ಕಳಾಗಿದ್ದು, ಕಚೇರಿಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದೇನೆ. ನನಗೆ ಪಾಲಕರೊಂದಿಗೆ ಹೋಗಲು ಇಷ್ಟವಿಲ್ಲ. ಸದ್ಯ ತಂಗಿರುವ ಪುನರ್ವಸತಿ ಕೇಂದ್ರದಲ್ಲಿ ಉಳಿಯಲೂ ಇಚ್ಛೆಯಿಲ್ಲ. ಹೀಗಾಗಿ ಮುಕ್ತವಾಗಿರಲು ಬಯಸಿದ್ದು, ನಾನು ಇಷ್ಟಪಡುವ ಪಿಜಿಯಲ್ಲಿ ನೆಲೆಸಲು ಬಯಸುತ್ತಿದ್ದೇನೆ. ಅದಕ್ಕೆ ಅವಕಾಶ ಕೊಡಬೇಕು. ಆ ಜಾಗ ನನಗೆ ಸುರಕ್ಷಿತವಾಗಿದೆ. ನಾನು ಉಳಿದುಕೊಳ್ಳುವ ಪಿಜಿಯ ವಿಳಾಸ ಬಹಿರಂಗಪಡಿಸುವುದಿಲ್ಲ. ನನಗೆ ಯಾವುದೇ ಪೊಲೀಸ್ ರಕ್ಷಣೆ ಸಹ ಬೇಡ ಎಂದು ವಿವರಿಸಿದರು.
ಈ ಅಂಶವನ್ನು ಒಪ್ಪಿದ ನ್ಯಾಯಪೀಠ, ಯುವತಿಯು ಬಯಸಿದ ಜಾಗದಲ್ಲಿ ನೆಲಸಲು ಅನುಮತಿ ನೀಡಿತು. ಅಲ್ಲದೆ, ಒಂದೊಮ್ಮೆ ಯುವತಿಗೆ ಯಾವುದೇ ಸಮಸ್ಯೆ ಎದುರಾದರೂ ಹತ್ತಿರದ ಪೊಲೀಸ್ ಠಾಣೆಯ ಮೊರೆ ಹೋಗಬಹುದು. ಸಂಬಂಧಪಟ್ಟ ಪೊಲೀಸರು ಯುವತಿಗೆ ಸೂಕ್ತ ನೆರವು ಕಲ್ಪಿಸಬೇಕು ಎಂದು ನಿರ್ದೇಶಿಸಿತು.
ಇದೇ ವೇಳೆ ಯುವತಿಯ ತಂದೆ ಪರ ವಕೀಲರು, ಅರ್ಜಿದಾರ ಯುವಕನೊಂದಿಗೆ ಚರ್ಚಿಸಿ (ಯುವತಿ ತಂದೆ) ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಮನವಿ ಪುರಸ್ಕರಿಸಿದ ನ್ಯಾಯಪೀಠ, ಸಮಯಾವಕಾಶ ಕಲ್ಪಿಸಿ ವಿಚಾರಣೆ ಮುಂದೂಡಿತು. ಅಂದು ಯುವತಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನಿರ್ದೇಶಿಸಿತು.







