ಮೂಲಗೇಣಿ ಕಾಯಿದೆ ಸಿಂಧುತ್ವ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು, ಮೇ 23: ಉಡುಪಿ ಮತ್ತು ದಕ್ಷಿಣ ಕನ್ನಡದ ಗೇಣಿದಾರರಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರಕಾರ ಜಾರಿಗೆ ತಂದಿರುವ ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿ ಗೇಣಿದಾರರಿಗೆ ಮಾಲಕತ್ವ ಪ್ರಧಾನ ಮಾಡುವ ಅಧಿನಿಯಮ-2011ರ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಉಡುಪಿಯ ಅದಮಾರು ಮಠ, ಗಣೇಶ್ ಪೈ ಮತ್ತಿತರರು ಸಲ್ಲಿಸಿದ್ದ 5 ಪ್ರತ್ಯೇಕ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪುನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಪ್ರಕಟಿಸಿದೆ. ಪೀಠ ತನ್ನ ತೀರ್ಪಿನಲ್ಲಿ ಸಾಮಾಜಿಕ ಅಸಮತೋಲನ ಸರಿಪಡಿಸುವ ನಿಟ್ಟಿನಲ್ಲಿ ಸರಕಾರದ ಕ್ರಮ ನ್ಯಾಯೋಚಿತವಾದದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಅರ್ಜಿದಾರರ ಪರ ವಾದಿಸಿದ್ದ ವಕೀಲರು, ಸೂಕ್ತ ಬೆಲೆ ಪಾವತಿಸಿ ಜಮೀನು ವಶಪಡಿಸಿಕೊಳ್ಳುವುದಕ್ಕೆ ವಿರುದ್ಧವಾಗಿ ಕನಿಷ್ಠ ಬೆಲೆ ಪಾವತಿಸುವ ಮೂಲಕ ಭೂಮಿ ವಶಕ್ಕೆ ಪಡೆಯುತ್ತಿರುವುದು ಕಾನೂನುಬಾಹಿರ. ಇದರಿಂದ ಮೂಲಗಾರರು ಅಥವಾ ಭೂ ಮಾಲಕರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಪೀಠಕ್ಕೆ ತಿಳಿಸಿದ್ದರು.
ಗೇಣಿದಾರರ ಪರ ವಾದಿಸಿದ್ದ ವಕೀಲರ, ಮೂಲಗೇಣಿದಾರರು ತಲೆಮಾರುಗಳಿಂದ ಭೂಮಿಯನ್ನು ಉಳುಮೆ ಮಾಡುತ್ತಾ ಬಂದಿದ್ದು, ಅವರಿಗೆ ಭೂಮಿಯ ಹಕ್ಕು ನೀಡುವುದು ನ್ಯಾಯೋಚಿತ. ಈ ನಿಟ್ಟಿನಲ್ಲಿ ಸರಕಾರ ಜಾರಿಗೊಳಿಸಿರುವ ಕಾಯಿದೆ ಸಿಂಧುವಾಗಿದೆ ಎಂದು ಪೀಠಕ್ಕೆ ಹೇಳಿದ್ದರು.
ಪ್ರಕರಣವೇನು?: ಸ್ವಾತಂತ್ರ್ಯ ಪೂರ್ವದಲ್ಲಿ ಭೂಕಂದಾಯ ವಸೂಲಿ ಮಾಡುವ ಅಧಿಕಾರವನ್ನು ಬ್ರಿಟಿಷರು ಸ್ಥಳೀಯ ಶ್ರೀಮಂತರು, ಮಠ, ಮಂದಿರ, ಮಸೀದಿ ಮತ್ತು ಚರ್ಚುಗಳಿಗೆ ನೀಡಿದ್ದರು. ಕಾಲಾನಂತರದಲ್ಲಿ ಆ ಭೂಮಿಯ ಕಂದಾಯ ವಸೂಲಿ ಮಾಡಿ, ಮೇಲುಸ್ತುವಾರಿ ನೋಡಿಕೊಳ್ಳುವವರು ಮೂಲದಾರರು/ಭೂ ಮಾಲಕರು ಎನಿಸಿಕೊಂಡಿದ್ದರು. ಕಾಲಾನಂತರದಲ್ಲಿ ಇದೇ ಭೂಮಿಯನ್ನು ತಲೆಮಾರುಗಳಿಂದ ವಾಸ್ತವಿಕವಾಗಿ ಅನುಭವಿಸಿಕೊಂಡು ಬಂದವರು ಮೂಲಗೇಣಿದಾರರು ಎಂದು ಭೂಮಿಯ ಪ್ರಮಾಣ ಪತ್ರದಲ್ಲಿ ನಮೂದಿಸಲಾಗಿತ್ತು.
ಭೂಮಿ ಸ್ವಾಧೀನದಲ್ಲಿದ್ದರೂ ಒಡೆತನವಿಲ್ಲದ ಕಾರಣ ಜಾಗವನ್ನು ಅಭಿವೃದ್ಧಿಪಡಿಸುವುದು ಮೂಲಗೇಣಿದಾರರಿಗೆ ಕಷ್ಟವಾಗಿತ್ತು. ಬ್ಯಾಂಕ್ನಿಂದ ಸಾಲ-ಸೌಲಭ್ಯ ದೊರೆಯುತ್ತಿರಲಲ್ಲ. ಹೀಗಾಗಿ, ಅದನ್ನು ಮಾರಾಟ ಮಾಡುವ ಹಕ್ಕೂ ಮೂಲಗೇಣಿದಾರರಿಗೆ ಇಲ್ಲವಾಗಿತ್ತು. ಸಾಕಷ್ಟು ಹೋರಾಟದ ಬಳಿಕ ಮೂಲಗೇಣಿದಾರರಿಗೆ ಜಮೀನಿನ ಪೂರ್ಣ ಮಾಲಕತ್ವ ಮತ್ತು ಮೂಲದಾರರಿಗೆ ನ್ಯಾಯಯುತ ಪರಿಹಾರ ನೀಡುವ ಸಂಬಂಧ ರಾಜ್ಯ ಸರಕಾರ ಕಾಯಿದೆ ಜಾರಿಗೆ ತಂದಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ಈಗ ನ್ಯಾಯಾಲಯ ವಜಾ ಮಾಡಿದೆ.







