ಮಂಡ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಸಚಿವ ಚಲುವರಾಯಸ್ವಾಮಿ

ಮಂಡ್ಯ, ಜೂ.4: ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಇರುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹರಿಸಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ರವಿವಾರ ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಆನೇಕ ರಾಜರು ಆಳ್ವಿಕೆ ಮಾಡಿದ್ದಾರೆ. ಮೈಸೂರು ಪ್ರಾಂತ್ಯದ ರಾಜರಾದ ನಾಲ್ವಡಿ ಅವರ ಹೆಸರು ಇಂದಿಗೂ ಅಚ್ಚಳಿಯದೇ ಉಳಿದಿದೇ ಎಂದರೇ ಅದಕ್ಕೆ ಕಾರಣ ಅವರು ಮಾಡಿದ ಜನಪರ ಕೆಲಸಗಳು ಎಂದು ಅವರು ಸ್ಮರಿಸಿದರು.
ನಾಲ್ವಡಿ ಅವರ ಚಿಂತನೆಗಳ ಫಲವಾಗಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದ ಜನರು ಉತ್ತಮ ಮೂಲಭೂತ ವ್ಯವಸ್ಥೆಗಳೊಂದಿಗೆ ಜೀವನ ನಡೆಸಿತ್ತಿದ್ದಾರೆ.
ನಾಲ್ವಡಿ ಅವರು ಸರಕಾರ ಎಂಬ ವ್ಯವಸ್ಥೆ ಪ್ರಾರಂಭವಾಗುವ ಮೊದಲೇ ರಾಜರ ಆಳ್ವಿಕೆಯಲ್ಲಿ ಶಾಲಾ, ಕಾಲೇಜು, ನೀರಾವರಿ, ಕಾರ್ಖಾನೆಗಳು, ರೈಲ್ವೆ ವ್ಯವಸ್ಥೆಯನ್ನು ಮಾಡಿ ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡಿದರು ಒಂದು ಅವರು ಹೇಳಿದರು.
ದೇವದಾಸಿ, ಬಸವಿ ಪದ್ಧತಿಯಂತಹ ಸಮಾಜದ ಪಿಡುಗನ್ನು ತೊಡದು ಹಾಕಿದರು. ಕನ್ನಂಬಾಡಿ ಅಣೆಕಟ್ಟು ನಿರ್ಮಾಣ ಮಾಡುವ ಸಂದರ್ಭದಲ್ಲಿ ಹಣದ ಕೊರತೆಯಿಂದ ತಮ್ಮ ಬಳಿಯಿದ್ದ ಚಿನ್ನವನ್ನು ಅಡವಿಟ್ಟರು. ಅವರ ತ್ಯಾಗವನ್ನು ಸದಾ ನೆನೆಯಬೇಕು ಎಂದು ಅವರು ಶ್ಲಾಘಿಸಿದರು.
ಇತಿಹಾಸಕಾರ ಎ.ಎಸ್.ಧಮೇಂದ್ರಕುಮಾರ್ ಮಾತನಾಡಿ, ರಾಜರ ಕಾಲದಲ್ಲಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ, ವಯಸ್ಕರ ಶಿಕ್ಷಣಕ್ಕಾಗಿ ರಾತ್ರಿ ವೇಳೆ ಶಿಕ್ಷಣವನ್ನು ಮೊದಲ ಬಾರಿಗೆ ಜಾರಿಗೆ ತಂದವರು ನಾಲ್ವಡಿ ಕೃಷ್ಣರಾಜ ಒಡೆಯರ್. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಗೋಷ ಟಾಂಗಾ, ಕುರುಡರಿಗೆ ಬ್ರೈಲ್ ಲಿಪಿ ವ್ಯವಸ್ಥೆ ಮಾಡಿದರು. ದೇಶಕ್ಕೆ ಮೊಟ್ಟಮೊದಲ ಬಾರಿಗೆ ಮತದಾನ ಪ್ರಕ್ರಿಯೆಯನ್ನು ಪರಿಚಯಿಸಿಕೊಟ್ಟರು ಎಂದರು.
ಕನ್ನಂಬಾಡಿ ಕಟ್ಟೆ ಕಟ್ಟಿ ಮಂಡ್ಯ ಜಿಲ್ಲೆಯ ಕೃಷಿಗೆ ನೀರನ್ನು ಹಾಗೂ ಮೈಶುಗರ್ ಕಾರ್ಖಾನೆ ನಿರ್ಮಿಸಿ ಸಕ್ಕರೆ ನಾಡು ಹೆಸರನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಇಡುವಂತೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸುವುದಾಗಿ ಶಾಸಕ ರವಿಕುಮಾರ್ ಗಣಿಗ ತಿಳಿಸಿದರು.
ಕಾರ್ಯಕ್ರಮದಲ್ಲಿ ಯಧುವೀರ್ ಕೃಷ್ಣರಾಜ ದತ್ತ ಒಡೆಯರ್, ಶಾಸಕ ಎ.ಬಿ.ರಮೇಶ್ಬಾಬು ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ, ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ವಿವಿಧ ಸಂಘಟನೆಗಳ ಮುಖ್ಯಸ್ಥರಾದ ಮೀರಾ ಶಿವಲಿಂಗಯ್ಯ, ತಗ್ಗಹಳ್ಳಿ ವೆಂಕಟೇಶ್, ಸುರೇಶ್, ನಟರಾಜ್, ಲಂಕೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.