ಸಿಡಿಲು ಬಡಿದು ರೈತ ಸ್ಥಳದಲ್ಲೇ ಮೃತ್ಯು

ಮಂಡ್ಯ, ಜೂ.20: ಸಿಡಿಲು ಬಡಿದು ರೈತ ಸಾವನ್ನಪ್ಪಿ, ಮತ್ತೊಬ್ಬ ಗಾಯಗೊಂಡಿರುವ ಘಟನೆ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಜವರೇಗೌಡರ ಪುತ್ರ ಮಂಜುನಾಥ್(40) ಮೃತಪಟ್ಟ ದುರ್ದೈವಿ. ಗಾಯಗೊಂಡಿರುವ ರಾಜು ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತನ್ನ ಜಮೀನಿನಲ್ಲಿ ಮಂಜುನಾಥ್ ಕೃಷಿ ಚಟುವಟಿಕೆ ಮಾಡುತ್ತಿದ್ದರು. ಮಧ್ಯಾಹ್ನ ಗುಡುಗು ಸಿಡಿಲು ಸಮೇತ ಮಳೆ ಬಂದಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂದರ್ಭ ಪಕ್ಕದಲ್ಲೇ ಇದ್ದ ಮತ್ತೊಬ್ಬ ರೈತ ರಾಜು ಗಾಯಗೊಂಡಿದ್ದಾರೆ. ಅವರಿಗೆ ಬಂಡಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು.
ಕುಟುಂಬಕ್ಕೆ ಆಸರೆಯಾಗಿದ್ದ ಮಂಜುನಾಥ್ ಸಾವಿನಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಈರೇಗೌಡ ಸರಕಾರವನ್ನು ಒತ್ತಾಯಿಸಿದ್ದಾರೆ.
Next Story





