4 ಲಕ್ಷ ಪ್ರಚಾರ ಕಾರ್ಯಕ್ರಮ: ವೇಣುಗೋಪಾಲ್
ಬೆಂಗಳೂರು, ಜ.30: ಕರ್ನಾಟಕ ಕಾಂಗ್ರೆಸ್ ಇತಿಹಾಸದಲ್ಲಿ ಮೊದಲ ಬಾರಿಗೆ ಬ್ಲಾಕ್, ಜಿಲ್ಲಾ, ಬೂತ್ ಅಧ್ಯಕ್ಷರ ಸಭೆ ನಡೆಸಲಾಗಿದ್ದು, ಚುನಾವಣೆ ಅಂತ್ಯದವರೆಗೂ 4 ಲಕ್ಷ ಪ್ರಚಾರ ಕಾರ್ಯಕ್ರಮಗಳು ನಡೆಯಲಿವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು.
ಮಂಗಳವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ತಯಾರಿ ಕುರಿತ ನಡೆಸಿದ ಸಭೆ ಖುಷಿ ತಂದಿದೆ. ಫೆಬ್ರವರಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಮನೆ, ಮನೆಗೆ ತೆರಳಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಫೆಬ್ರವರಿಯಲ್ಲಿ ಬೂತ್ ಮಟ್ಟದಲ್ಲಿ ಮ್ಯಾಸಿವ್ ರ್ಯಾಲಿ, ಗ್ರಾ.ಪಂ ವ್ಯಾಪ್ತಿಯಲ್ಲಿ ಬೃಹತ್ ಅಭಿಯಾನ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ರಾಜ್ಯದ ನಾಯಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ, ಒಟ್ಟು 4 ಲಕ್ಷ ಪ್ರಚಾರ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಮಾರ್ಚ್ ಕೊನೆಯ ವಾರದಲ್ಲಿ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಪ್ರಮುಖ ಪ್ರಚಾರಕ ರಾಹುಲ್
ಪ್ರಚಾರಕ್ಕೆ ದಕ್ಷಿಣ ಭಾರತೀಯ ಸಿನೆಮಾ ತಾರೆಯರನ್ನು ತರುವ ಬಗ್ಗೆ ಚಿಂತನೆ ನಡೆದಿದೆ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರೇ ಪ್ರಮುಖ ಪ್ರಚಾರಕರು ಎಂದು ಕೆ.ಸಿ.ವೇಣುಗೋಪಾಲ್ ಹೇಳಿದರು.