ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯಲ್ಲಿ ರಾಜ್ಯಕ್ಕೆ ಅನ್ಯಾಯ: ಆರೋಪ
ಬೆಂಗಳೂರು, ಸೆ.4: ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವಲ್ಲಿ ರಾಜ್ಯದ ಶಿಕ್ಷಕರಿಗೆ ಅನ್ಯಾಯವಾಗಿದೆ ಎಂದು ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಫೆಡರೇಷನ್ ಉಪಾಧ್ಯಕ್ಷ ಬಸವರಾಜ ಗುರಿಕಾರ ಆರೋಪಿಸಿದ್ದಾರೆ.
ಈ ಹಿಂದಿನ ವರ್ಷಗಳಲ್ಲಿ ರಾಜ್ಯದಿಂದ ಕನಿಷ್ಠ 15 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿತ್ತು. ಆದರೆ, ಈ ವರ್ಷ ಕೇವಲ 3 ಶಿಕ್ಷಕರಿಗೆ ಮಾತ್ರ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಇದರಿಂದ ರಾಜ್ಯದ ಶಿಕ್ಷಕರಿಗೆ ಅನ್ಯಾಯವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ವಿಷಾದಿಸಿದ್ದಾರೆ.
ಪ್ರತಿ ಜಿಲ್ಲೆಯಿಂದ ಒಟ್ಟು 34 ಶಿಫಾರಸ್ಸುಗಳು ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಸ್ತಾವನೆ ಬಂದರು ಕೇವಲ 3ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಆಯ್ದ ಕೆಲವು ಶಿಕ್ಷಕರುಗಳನ್ನು ನವದೆಹಲಿಗೆ ಆಹ್ವಾನಿಸಿ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಕ್ರಿಯಾಯೋಜನೆ ಮಂಡಿಸಲು ಅವಕಾಶ ನೀಡಲಾಗಿತ್ತು. ಪ್ರಾದೇಶಿಕ ಭಾಷೆಯಲ್ಲಿ ಮಂಡನೆಗೆ ಅವಕಾಶ ನೀಡದೆ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಅವರು ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.