ಕರ್ನಾಟಕದಲ್ಲಿ ಬಿಜೆಪಿಯ ದುಡ್ಡಿನ ಆಟ ನಡೆಯುವುದಿಲ್ಲ: ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್
ಬೆಂಗಳೂರು, ಸೆ. 16: ಎಷ್ಟೇ ಹಣದ ಹೊಳೆಯನ್ನು ಹರಿಸಿದರೂ ಬಿಜೆಪಿಯ ಆಟ ಕರ್ನಾಟಕ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಡೆಯುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ರವಿವಾರ ಇಲ್ಲಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರೊಂದಿಗೆ ಸಮಾಲೋಚನೆ ನಡೆಸಿ, ಬಳಿಕ ಮಾತನಾಡಿದರು.
ಕೇಂದ್ರ ಸರಕಾರ, ಐಟಿ ಮತ್ತು ಇಡಿಯಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡರೂ ಬಿಜೆಪಿಯ ದುಡ್ಡಿನ ಆಟ ನಡೆಯುವುದಿಲ್ಲ ಎಂದ ಅವರು, ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಬಿಜೆಪಿ ಪ್ರಯತ್ನ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರಕ್ಕೆ ಯಾವುದೇ ಆತಂಕವಿಲ್ಲ. ಮೈತ್ರಿ ಸರಕಾರ ಸುಭದ್ರವಾಗಿದ್ದು, ಐದು ವರ್ಷ ಅಧಿಕಾರ ಪೂರ್ಣಗೊಳಿಸಲಿದೆ. ಈ ಬಗ್ಗೆ ಯಾವುದೇ ಕಾರಣಕ್ಕೂ ಯಾರೊಬ್ಬರಿಗೂ ಅನುಮಾನ ಬೇಡ ಎಂದು ವೇಣುಗೋಪಾಲ್ ಇದೇ ವೇಳೆ ಸ್ಪಷ್ಟಪಡಿಸಿದರು.
ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು. ಈಗಾಗಲೇ ಹೇಳಿರುವಂತೆ ಈ ತಿಂಗಳ ಅಂತ್ಯದೊಳಗೆ ಸಂಪುಟ ವಿಸ್ತರಣೆ ನಡೆಯಲಿದ್ದು, ಮುಂದೂಡುವ ಪ್ರಶ್ನೆಯೇ ಇಲ್ಲ ಎಂದ ಅವರು, ಜಾರಕಿಹೊಳಿ ಸಹೋದರರ ವಿಚಾರ ಸಮಸ್ಯೆಯೇ ಅಲ್ಲ. ಅದರಿಂದ ಪಕ್ಷಕ್ಕೆ ಹಾಗೂ ಸರಕಾರಕ್ಕೆ ಯಾವುದೇ ತೊಂದರೆಯೂ ಆಗುವುದಿಲ್ಲ ಎಂದರು.