ಸಂವಿಧಾನ-ಏಕತೆ ಕಾಪಾಡಲು ಕಾಂಗ್ರೆಸ್ ಬೆಂಬಲಿಸಿ: ಬಿ.ಕೆ.ಹರಿಪ್ರಸಾದ್
ಬೆಂಗಳೂರು, ಮಾ.29: ದೇಶದ ಸಂವಿಧಾನ, ಏಕತೆಯನ್ನು ಕಾಪಾಡಲು ಲೋಕಸಭಾ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಬೇಕು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಕರೆ ನೀಡಿದರು.
ಶುಕ್ರವಾರ ಜಯನಗರದ ಪೂರ್ಣಿಮಾ ಕಲ್ಯಾಣ ಮಂಟಪದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರಮೋದಿ ನೋಟುಗಳ ಅಮಾನ್ಯೀಕರಣ ಮಾಡಿ, ವೃದ್ಧ ತಾಯಂದಿರನ್ನು ಬ್ಯಾಂಕುಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲಿಸಿದ್ದನ್ನು ಬಹುದೊಡ್ಡ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇಂತಹ ಮಗ ತಾಯಂದಿರಿಗೆ ಬೇಕಾ ಎಂದು ಹರಿಪ್ರಸಾದ್ ಪ್ರಶ್ನಿಸಿದರು.
ಈ ದೇಶದಲ್ಲಿ ಕಾಂಗ್ರೆಸ್ ಎಲ್ಲ ಜನರ ನಡುವೆ ಸೌಹಾರ್ದತೆ ಕಾಪಾಡಿಕೊಂಡು ಹೋಗುವ ಹೆಗ್ಗಳಿಕೆ ಹೊಂದಿದೆ. ಬೆಂಗಳೂರು ಬಹು ಸಂಸ್ಕೃತಿಗಳನ್ನು ಹೊಂದಿರುವ ನಗರ. ಈ ಹೆಸರನ್ನು ಉಳಿಸಿಕೊಂಡು ಹೋಗುವ ಅಗತ್ಯವಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಬಿಬಿಎಂಪಿ ಸದಸ್ಯರು ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.