ಕನ್ನಡಿಗರಿಗೆ ಶೇ.75ರಷ್ಟು ಮೀಸಲಾತಿ ನೀಡಿ: ಮುಖ್ಯಮಂತ್ರಿ ಚಂದ್ರು
ಬೆಂಗಳೂರು, ಆ.30: ಖಾಸಗಿ ಕ್ಷೇತ್ರದ ಉದ್ಯೋಗಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎಂದು ಕನ್ನಡ ನುಡಿ, ಕನ್ನಡ ಗಡಿ ಜಾಗೃತಿ ಸಮಿತಿ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಕರ್ನಾಟಕ ಕೈಗಾರಿಕಾ ಉದ್ಯೋಗಗಳ ಅಧಿನಿಯಮಕ್ಕೆ ತಿದ್ದುಪಡಿ ಮಾಡಿ ಮೇ 24ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಸರೋಜಿನಿ ಮಹಿಷಿ ವರದಿಯಲ್ಲಿರುವ ಕೆಲವು ಅಂಶಗಳನ್ನು ಖಾಸಗಿ ಉದ್ಯಮಗಳಿಗೆ ಸೂಚಿಸಲಾಗಿತ್ತು. ಆದರೆ ಮಹಿಷಿ ವರದಿಯನ್ನು ವಿರೋಪಗೊಳಿಸುವ ಈ ಅಧಿಸೂಚನೆಗೆ ಆಕ್ಷೇಪ ವ್ಯಕ್ತಪಡಿಸಿ ಕಾರ್ಮಿಕ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ಕರೆದಿದ್ದ ಸಭೆಯಲ್ಲಿ ಮಹಿಷಿ ವರದಿಯ ಸಲಹೆಯಂತೆ 15 ವರ್ಷ ಕಡ್ಡಾಯವಾಗಿ ರಾಜ್ಯದಲ್ಲಿ ವಾಸವಾಗಿರಬೇಕು. ಕನ್ನಡ ಓದಲು ಬರೆಯಲು, ಬರುವವರಿಗೆ ಮಾತ್ರ ಖಾಸಗಿ ಉದ್ಯಮಗಳ ಸಿ ಮತ್ತು ಡಿ ದರ್ಜೆ ಹುದ್ದೆಗಳ ಶೇ.75ರಷ್ಟು ಮೀಸಲಾತಿ ಕಡ್ಡಾಯಗೊಳಿಸುವ ಆದೇಶ ಹೊರಡಿಸುವುದಾಗಿ ಕಾರ್ಯದರ್ಶಿ ಪ್ರಕಟಿಸಿದ್ದಾರೆ. ಆದ್ದರಿಂದ ಈ ತಿದ್ದುಪಡಿಯನ್ನು ಸಂಪುಟ ಸಭೆಗೆ ಕಳುಹಿಸುವ ಮುನ್ನ ತಿದ್ದುಪಡಿಯ ವಿಚಾರ ಕುರಿತು ಚರ್ಚಿಸಬೇಕು ಎಂದು ಆಗ್ರಹಿಸಿದರು.
ಇನ್ನು, ಸಿಬ್ಬಂದಿ ಆಯ್ಕೆಗೆ ಆಯೋಗವು ನಡೆಸುವ ನೇಮಕಾತಿ ಆಯ್ಕೆ ಪರೀಕ್ಷೆಗಳಲ್ಲಿ ಕನ್ನಡದಲ್ಲೂ ಬರೆಯಲು ಅವಕಾಶವಿರಬೇಕು. ಬೆಂಗಳೂರು ಪ್ರಾದೇಶಿಕ ಕಚೇರಿಯ ವ್ಯಾಪ್ತಿಯಲ್ಲಿ ಬರುವ ರಾಜ್ಯಗಳ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆಯಲ್ಲಿ ಪಾಲ್ಗೊಳ್ಳುವ ಅವಕಾಶವಿರಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಶೋಧಕ ಚಿದಾನಂದ ಮೂರ್ತಿ, ರಾ.ನಂ.ಚಂದ್ರಶೇಖರ ಹಾಗೂ ವ.ಚ.ಚನ್ನೇಗೌಡ ಉಪಸ್ಥಿತರಿದ್ದರು.