ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ವಿದ್ಯಾರ್ಥಿನಿಯರ ಪಟ್ಟು
ಬೆಂಗಳೂರು, ಡಿ.3: ಹೈದರಾಬಾದ್ ನ ಪಶುವೈದ್ಯೆ ಡಾ.ಪ್ರಿಯಾಂಕರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ವಿದ್ಯಾರ್ಥಿನಿಯರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನ ಮೈದಾನದಲ್ಲಿ ಜಮಾಯಿಸಿದ ಪಶು ವೈದ್ಯಕೀಯ ಹಾಗೂ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರು, ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನೆ ವಿಧಿಸಬೇಕು ಎಂದು ಆಗ್ರಹಿಸಿದರು.
ಹೊಸದಿಲ್ಲಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ನೆನಪು ಮಾಸುವ ಮೊದಲೇ ಮತ್ತೊಂದು ಸಂಭವಿಸಿರುವುದು ಜನರಲ್ಲಿ ಭಯ ಹುಟ್ಟಿಸಿದಂತಾಗಿದೆ. ಹೈದರಾಬಾದಿನ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ಒತ್ತಾಯಿಸಿದರು.
ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದ್ದರೂ ರಾಜಕಾರಣಿಗಳಿಗೆ ನಾಚಿಕೆ ಇಲ್ಲದಂತಾಗಿದೆ ಎಂದ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರು, ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಶೋಷಣೆ ಮರುಕಳುಹಿಸುತ್ತಿದ್ದರೂ, ಸರಕಾರಗಳು ಮೌನವಹಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.