ಎಚ್.ಡಿ.ರೇವಣ್ಣ ಮಾತಿಗೆ ಮಹತ್ವ ಕೊಡಬೇಕಿಲ್ಲ: ಡಿಸಿಎಂ ಅಶ್ವಥ್ ನಾರಾಯಣ
ಬೆಂಗಳೂರು, ಡಿ. 5: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾ ಸಂಸ್ಕೃತಿಯ ಜೆಡಿಎಸ್ನ ಮುಖಂಡ ಎಚ್.ಡಿ.ರೇವಣ್ಣ ಬಾಯಿಗೆ ಬಂದ ಹೇಳಿಕೆ ನೀಡುವವರೆಂದೇ ಪ್ರಸಿದ್ಧಿ ಪಡೆದಿದ್ದು, ಅವರ ಹೇಳಿಕೆಗೆ ಮಹತ್ವ ನೀಡುವ ಅಗತ್ಯ ಇಲ್ಲ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ.
ಗುರುವಾರ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿರುವ ಬಿಬಿಎಂಪಿ ಸದಸ್ಯ ಆನಂದ್ ಹೊಸೂರ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಅಶ್ವಥ್ ನಾರಾಯಣ, ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕೆ.ಆರ್.ಪೇಟೆಯಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂಬ ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರೇವಣ್ಣನವರ ಆರೋಪಕ್ಕೆ ಯಾವುದೇ ಆಧಾರ ಇಲ್ಲ. ಬಾಯಿಗೆ ಬಂದ ಹಾಗೆ ಹೇಳಿಕೆ ನೀಡುತ್ತಾರೆ. ರಾಜಕೀಯ ಮಾಡಲು ರೀತಿ ನೀತಿ ಇದೆ. ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.
ಚುನಾವಣೆ ಬಳಿಕ ಬಿಜೆಪಿ ಕಾರ್ಯಕರ್ತರು ಕ್ಷೇತ್ರದಿಂದ ಹೊರಬಂದು, ಹೊಳೆನರಸೀಪುರದ ನಂಬಿಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲಿಂದ ಹೊರಡುವ ವೇಳೆ ಏಕಾಏಕಿ ನುಗ್ಗಿದ ಜೆಡಿಎಸ್ ಕಾರ್ಯಕರ್ತರು ಇಡೀ ಮನೆ ಹುಡುಕಾಡಿ ಹೋಗಿದ್ದರು. ಸೂರಜ್ ರೇವಣ್ಣ ಜತೆ ಮತ್ತೆ ನುಗ್ಗಿದ ಜೆಡಿಎಸ್ ಕಾರ್ಯಕರ್ತರು ನಮ್ಮವರ ಮೇಲೆ ಹಲ್ಲೆ ನಡೆಸಿ, ಮನೆಯ 5 ಬಾಗಿಲು ಒಡೆದು ಹಾಕಿದ್ದಾರೆ ಎಂದು ದೂರಿದರು.