ಬೆಂಗಳೂರು ಅಭಿವೃದ್ಧಿ ಖಾತೆ ಬೇಕು: ಶಾಸಕ ಸೋಮಶೇಖರ್
ಬೆಂಗಳೂರು, ಫೆ. 2: ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಪಡಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ನಮ್ಮೆಲ್ಲ ಭರವಸೆಯನ್ನು ಈಡೇರಿಸುವ ವಿಶ್ವಾಸವಿದೆ ಎಂದು ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ ಖಾತೆ ಪಡೆಯಬೇಕೆಂದು ಕ್ಷೇತ್ರದ ಜನತೆ ಒತ್ತಾಯ ಮಾಡುತ್ತಿದ್ದಾರೆ. ಆದರೆ, ನಾನು ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿಲ್ಲ ಎಂದು ಸ್ಪಷ್ಟನೆ ನೀಡಿದರು. ನಮ್ಮೊಂದಿಗೆ ಸಮಾಲೋಚನೆ ವೇಳೆ ನಾವೂ ಯಾವುದೇ ಖಾತೆಗಳನ್ನು ಕೇಳಿಲ್ಲ.ಈ ಬಗ್ಗೆ ಚರ್ಚೆ ಮಾಡಿಲ್ಲ. ಒಂದು ವೇಳೆ ಯಾವ ಖಾತೆ ಬೇಕೆಂದು ಕೇಳಿದರೆ ನಾನು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಕೇಳುತ್ತೇನೆ ಎಂದು ಸೋಮಶೇಖರ್ ಇದೇ ವೇಳೆ ತಿಳಿಸಿದರು.
ಮಾಜಿ ಸಚಿವ ಆರ್.ಶಂಕರ್ ಅವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಅವರನ್ನು ಮೇ ತಿಂಗಳಲ್ಲಿ ಮೇಲ್ಮನೆ ಸದಸ್ಯರನ್ನಾಗಿ ನೇಮಕ ಮಾಡಿ ಆ ಬಳಿಕ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಿಎಂ ಬಿಎಸ್ವೈ ಭರವಸೆ ನೀಡಿದ್ದಾರೆಂದು ಸೋಮಶೇಖರ್ ಸ್ಪಷ್ಟನೆ ನೀಡಿದರು.