ಕೊರೋನ ಚಿಕಿತ್ಸಾ ಆಸ್ಪತ್ರೆಗೆ ನೆರವಾಗಲು ಮುಂದೆ ಬಂದ ಇನ್ಫೋಸಿಸ್ ಫೌಂಡೇಶನ್
ಬೆಂಗಳೂರು, ಮಾ.13: ದೇಶ-ವಿದೇಶಗಳಲ್ಲಿ ಆತಂಕ ತಂದಿರುವ ಕೊರೋನ ವೈರಸ್ ವ್ಯಾಪಕವಾಗಿ ಹರಡದಂತೆ ನಮ್ಮ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಈ ಸಂಬಂಧ ಬರೆದುಕೊಂಡಿರುವ ಸುರೇಶ್ ಕುಮಾರ್, ಒಂದು ಆಸ್ಪತ್ರೆಯನ್ನು ತಮಗೆ ವಹಿಸಿದರೆ ಅದನ್ನು ಕೊರೋನ ವೈರಸ್ ಚಿಕಿತ್ಸೆಗಾಗಿ ತಮ್ಮ ಸಂಸ್ಥೆಯ ವೆಚ್ಚದಲ್ಲಿ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸಿ, ಅಗತ್ಯ ಉಪಕರಣಗಳನ್ನೂ ಒದಗಿಸುವುದಾಗಿ ಸುಧಾಮೂರ್ತಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲ, ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರೊಂದಿಗೂ ತಮ್ಮ ಈ ಪಾತ್ರದ ಕುರಿತು ಸುಧಾಮೂರ್ತಿ ಚರ್ಚಿಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಗೂ ಪತ್ರ ಬರೆದಿದ್ದಾರೆ. ಸದ್ಯದಲ್ಲಿಯೆ ಈ ಕುರಿತು ಉನ್ನತಮಟ್ಟದ ಸಭೆ ನಡೆಯಲಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ನಿನ್ನೆ ಸಂಜೆ ಸುಧಾಮೂರ್ತಿಯವರಿಗೆ ಫೋನ್ ಮಾಡಿ ನಮ್ಮ ಶಿಕ್ಷಣ ಇಲಾಖೆಯಲ್ಲಿ ಮಕ್ಕಳ ಹಿತವನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳಿಗೆ ರಜೆ ಘೋಷಿಸಿರುವ ಕ್ರಮ ವಿವರಿಸಿದೆ. ಇಷ್ಟು ಬೇಗ ಕ್ರಮ ತೆಗೆದುಕೊಂಡಿರುವ ಬಗ್ಗೆ ತಮ್ಮ ಸಂತಸ ವ್ಯಕ್ತಪಡಿಸಿದರು. ಈ ಹೃದಯವಂತಿಕೆ ನನ್ನ ಹೃದಯ ತುಂಬಿತು. ನಿಜವಾದ ಮಾತೃ ಕಾಳಜಿ ಈ ಮಹಾತಾಯಿಯದು ಎಂದು ಅವರು ಬಣ್ಣಿಸಿದ್ದಾರೆ.