ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ 'ಮಂಗನ ಕಾಯಿಲೆ': ಸರಕಾರದ ವಿರುದ್ಧ ಬಿಜೆಪಿ ಶಾಸಕರಿಂದಲೇ ಆಕ್ರೋಶ
ಶ್ರೀರಾಮುಲುಗೆ ಹಾಲಪ್ಪ ಸತ್ಯಾಗ್ರಹದ ಎಚ್ಚರಿಕೆ ನೀಡಿದ್ದೇಕೆ ?
ಬೆಂಗಳೂರು, ಮಾ. 16: ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ ಹಾಗೂ ಉತ್ತರ ಕನ್ನಡದ ಸಿದ್ಧಾಪುರ ಕ್ಷೇತ್ರ ಸೇರಿದಂತೆ ಮಲೆನಾಡು ಭಾಗದಲ್ಲಿ ವ್ಯಾಪಿಸಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರೇ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.
ಸೋಮವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಸದಸ್ಯರಾದ ಹರತಾಳು ಹಾಲಪ್ಪ ಮತ್ತು ಅರಗ ಜ್ಞಾನೇಂದ್ರ, ಶಿವಮೊಗ್ಗ ಮತ್ತು ಉತ್ತರ ವ್ಯಾಪ್ತಿಯಲ್ಲಿ ಕೊರೋನ ವೈರಸ್ಗಿಂತಲೂ ಭೀಕರ ಸ್ವರೂಪದಲ್ಲಿ ಜನತೆ ಮಂಗನ ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದು ಗಮನ ಸೆಳೆದರು.
'ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಾಗರದಲ್ಲಿ ಪ್ರಯೋಗಾಲಯ ಸ್ಥಾಪಿಸಬೇಕು. ಈ ಕಾಯಿಲೆಯಿಂದ ಸಾವನ್ನಪ್ಪಿದವರ ಚಿಕಿತ್ಸೆಗೆ ಸೂಕ್ತ ಕ್ರಮ ವಹಿಸಬೇಕು. ಅಗತ್ಯ ಔಷಧ ಪೂರೈಕೆ ಮಾಡಬೇಕು. ಅಲ್ಲದೆ, ನಿಯಂತ್ರಣಕ್ಕೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಳಿಕ ಉತ್ತರ ನೀಡಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಸಾಗರ, ತೀರ್ಥಹಳ್ಳಿ ಸೇರಿ ಮಲೆನಾಡಿನಲ್ಲಿ ಕಳೆದ ವರ್ಷ 210 ಮಂಗನ ಖಾಯಿಲೆ ಪ್ರಕರಣ ದಾಖಲಾಗಿತ್ತು. ಈ ವರ್ಷ 419 ಪ್ರಕರಣಗಳು ಕಾಣಿಸಿಕೊಂಡಿದ್ದು, ಆ ಪೈಕಿ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹರತಾಳು ಹಾಲಪ್ಪ, ಮಂಗನ ಕಾಯಿಲೆಯಿಂದ ಈ ವರೆಗೂ 23 ಮಂದಿ ಸಾವನ್ನಪ್ಪಿದ್ದಾರೆ. ಹೀಗೆ ಸದನದಲ್ಲಿ ತಪ್ಪು ಮಾಡಿದರೆ ನಾನು ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ. ಈ ಬಗ್ಗೆ ನನ್ನ ಬಳಿ ದಾಖಲೆ ಇದೆ' ಎಂದು ಆಕ್ರೋಶ ಹೊರಹಾಕಿದರು.
ಸಾವಿನ ಕೂಪ: ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸಾವಿನ ಕೂಪವಾಗಿ ಮಾರ್ಪಟ್ಟಿದೆ. ಹಿಂದಿನ ಸರಕಾರ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದರಿಂದ ಕಾಯಿಲೆ ನಿಯಂತ್ರಣಕ್ಕೆ ಬಂದಿತ್ತು. ಇದೀಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಸತ್ತವರನ್ನು ಕನಿಷ್ಟ ಮರಣೋತ್ತರ ಪರೀಕ್ಷೆಯನ್ನು ಮಾಡುವುದಿಲ್ಲ. ಕೆಲ ಅಧಿಕಾರಿಗಳು ಸಿಎಂಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಿಯಂತ್ರಣ ಅಸಾಧ್ಯ: ತಪ್ಪು ಮಾಹಿತಿ ನೀಡುವ ಅಧಿಕಾರಿಗಳು ಮತ್ತವರ ಕುಟುಂಬದವರಿಗೆ ಕಾಯಿಲೆ ಬಂದರೆ ಅದರ ಗಂಭೀರತೆ ಅರಿವಾಗುತ್ತದೆ. ಇಂತಹ ಬೇಜವಾಬ್ದಾರಿ ಅಧಿಕಾರಿಗಳಿಂದ ಕೊರೋನ ಮಂಗನ ಕಾಯಿಲೆ ನಿಯಂತ್ರಣ ಅಸಾಧ್ಯ ಎಂದು ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದರು.
ಬಳಿಕ ಉತ್ತರ ನೀಡಿದ ಸಚಿವ ಶ್ರೀರಾಮುಲು, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ, ಆ ಭಾಗದ ಶಾಸಕರಾದ ಹಾಲಪ್ಪ, ಅರಗ ಜ್ಞಾನೇಂದ್ರ ಸೇರಿ ಇನ್ನಿತರರ ಜತೆ ಸಭೆ ನಡೆಸಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಭರವಸೆ: ಮಂಗನ ಕಾಯಿಲೆ ಭಾದಿತರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೆಚ್ಚವನ್ನು ಮರುಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಭರವಸೆ ನೀಡಿದ್ದಾರೆ.
ಕಳೆದ ವರ್ಷ ವೆಂಟಿಲೆಂಟರ್ವುಳ್ಳ ಮೂರು ಅಂಬ್ಯುಲೆನ್ಸ್ಗಳನ್ನು ನಿಯೋಜಿಸಿದ ರೀತಿಯಲ್ಲಿಯೇ ಈ ವರ್ಷವೂ ನಿಯೋಜಿಸುವುದು ಹಾಗೂ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಂಬ್ಯುಲೆನ್ಸ್ ಒದಗಿಸಲಾಗುವುದು. ಮಂಗನ ಕಾಯಿಲೆಗೆ ತುತ್ತಾಗುವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಾವೇದ್ ಅಖ್ತರ್ ತಿಳಿಸಿದ್ದಾರೆ ಎಂದು ಹಾಲಪ್ಪ ಹೇಳಿದ್ದಾರೆ.