ಸ್ಯಾನ್ಫ್ರಾನ್ಸಿಸ್ಕೊನಿಂದ ಬೆಂಗಳೂರಿಗೆ 107 ಪ್ರಯಾಣಿಕರ ಆಗಮನ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಬೆಂಗಳೂರು, ಮೇ 15: ಕೋವಿಡ್-19 ಲಾಕ್ಡೌನ್ ಪರಿಸ್ಥಿತಿಯಲ್ಲಿ ಸ್ಯಾನ್ಫ್ರಾನ್ಸಿಸ್ಕೋದಿಂದ ಇಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಾಲ್ಕನೆ ವಿಮಾಣದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 107 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ 107 ಪ್ರಯಾಣಿಕರಲ್ಲಿ 59 ಪುರುಷ ಮತ್ತು 48 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಒಬ್ಬರು ಗರ್ಭಿಣಿ ಮಹಿಳೆ ಹಾಗೂ 10 ವರ್ಷದೊಳಗಿನ ಒಂದು ಮಗು ಇದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ನಡೆಸಿದ 107 ಪ್ರಯಾಣಿಕರ ಆರೋಗ್ಯ ತಪಾಸಣೆ ವೇಳೆ, ಒಬ್ಬ ಪುರುಷ ಪ್ರಯಾಣಿಕರಲ್ಲಿ ಕೊರೋನ ವೈರಾಣು ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ವಿಮಾನ ನಿಲ್ದಾಣದಿಂದ ನೇರವಾಗಿ ಬೆಂಗಳೂರಿನ ರಾಜೀವ್ ಗಾಂಧಿ ಹೃದ್ರೋಗ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ರವೀಂದ್ರ ತಿಳಿಸಿದ್ದಾರೆ.
ಇನ್ನುಳಿದಂತ 106 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ಗಾಗಿ ಹೊಟೇಲ್ಗಳಿಗೆ ಬಿಎಂಟಿಸಿ ಬಸ್ಗಳ ಮೂಲಕ ಕಳುಹಿಸಿಕೊಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಭರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.