ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕ ಎನ್.ರವಿಕುಮಾರ್
ಬೆಂಗಳೂರು, ಆ.24: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಿನ ಮೂರು ವರ್ಷಗಳ ಅವಧಿಗೆ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ಸಂತೋಷ್ರೊಂದಿಗೆ ನಡೆದ ಸಭೆಯಲ್ಲಿ ನಾಯಕತ್ವ ಬದಲಾವಣೆಯಂತಹ ಯಾವುದೇ ಚರ್ಚೆ ಆಗಿಲ್ಲ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಸಂಪೂರ್ಣ ಸುಳ್ಳು. ಬಿ.ಎಲ್.ಸಂತೋಷ್ ಅವರು ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿವಾಸಕ್ಕೆ ಹೋಗಿ ಭೋಜನ ಸ್ವೀಕರಿಸಿ ಬಂದಿದ್ದಾರೆ ಅಷ್ಟೇ. ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು ಸತ್ಯಕ್ಕೆ ದೂರವಾದವು. ಪಕ್ಷ ಸಂಘಟನೆ ವಿಚಾರವಾಗಿ ಮಾತ್ರ ಚರ್ಚೆ ನಡೆದಿದೆ. ಯಡಿಯೂರಪ್ಪನವರೇ ಮುಂದಿನ ಮೂರು ವರ್ಷಕ್ಕೆ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕೆಲ ಸಚಿವರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಬಿ.ಎಲ್.ಸಂತೋಷ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಆದರೆ ಇಲಾಖೆ ಮೌಲ್ಯಮಾಪನವನ್ನು ಸಂತೋಷ್ ಅವರು ಮಾಡುತ್ತಿಲ್ಲ, ಎಸ್ಡಿಪಿಐ ಗಲಾಟೆ ಹೇಗೆ ಸಂಭವಿಸಿತು? ಕೊರೋನ ನಿಯಂತ್ರಣ ಹೇಗಿದೆ? ಎನ್ನುವ ಕುರಿತು ಸಂಬಂಧಪಟ್ಟ ಸಚಿವರ ಜೊತೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಕೊರೋನ ಹಿನ್ನೆಲೆಯಲ್ಲಿ ಬಿ.ಎಲ್.ಸಂತೋಷ್ ರಾಜ್ಯಕ್ಕೆ ಬಂದಿರಲಿಲ್ಲ. ಹೊಸದಾಗಿ ನಮ್ಮ ರಾಜ್ಯ ಸಮಿತಿ ರಚನೆಯಾಗಿದೆ. ರಾಜ್ಯ ಅಧ್ಯಕ್ಷರು, ಮೋರ್ಚಾ ಅಧ್ಯಕ್ಷರು, ಮಾಧ್ಯಮ ವಿಭಾಗ, ಸಾಮಾಜಿಕ ಜಾಲತಾಣ ವಿಭಾಗದ ಜೊತೆಗೆ ಸಭೆ ಮಾಡಿದ್ದಾರೆ. ಪಕ್ಷದ ಆಂತರಿಕ ವಿಚಾರದ ಬಗ್ಗೆಯೂ ಚರ್ಚೆಯಾಗಿದೆ. ನಮಗೆಲ್ಲ ರಾಜ್ಯ ಪ್ರವಾಸ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.