ಆಸ್ಪತ್ರೆ ಸಿಬ್ಬಂದಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ: ಆರೋಪ
ಬೆಂಗಳೂರು, ಅ.27: ಕ್ಷುಲ್ಲಕ ವಿಚಾರಕ್ಕೆ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಕಮ್ಮನಹಳ್ಳಿಯಲ್ಲಿರುವ ಜಿಯಾನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಲಿಂಗರಾಜಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾನ್ ಕುಮಾರ್ ಈ ಕೃತ್ಯವೆಸಗಿರುವುದಾಗಿ ತಿಳಿದುಬಂದಿದೆ.
ಜಾನ್ ಕುಮಾರ್, ತಮ್ಮ ಮಗಳಿಗೆ ಅನಾರೋಗ್ಯದ ಕಾರಣ ಈ ಆಸ್ಪತ್ರೆಗೆ ಕರೆತಂದಿದ್ದು, ಚಿಕಿತ್ಸೆ ವೆಚ್ಚದಲ್ಲಿ ರಿಯಾಯಿತಿ ನೀಡುವಂತೆ ಕೇಳಿಕೊಂಡಿದ್ದಾನೆ. ಆಸ್ಪತ್ರೆ ನಿಯಮಗಳಂತೆ ಕಡಿಮೆ ಮಾಡಲು ಆಗುವುದಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
ಇದಕ್ಕೆ ಅಕ್ರೋಶ ವ್ಯಕ್ತಪಡಿಸಿ ಆತ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವುದಾಗಿ ಹೇಳಲಾಗುತ್ತಿದ್ದು, ಈ ಸಂಬಂಧ ಆರೋಪಿಯ ವಿರುದ್ಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story