ಮಹಿಳಾ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ: ಎಐಎಂಎಸ್ಎಸ್ ನಾಯಕಿ ಶಾಂತಾ
ಬೆಂಗಳೂರು, ಅ.29: ಉತ್ತರ ಪ್ರದೇಶದ ಹತ್ರಸ್ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ, ಸಾವು ಪ್ರಕರಣದಲ್ಲಿ ಸಂತ್ರಸ್ಥೆಯ ಕುಟುಂಬಕ್ಕೆ ಹಾಗೂ ದೇಶದ ಮಹಿಳಾ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದೆಂದು ಎಐಎಂಎಸ್ಎಸ್ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಶಾಂತಾ ತಿಳಿಸಿದ್ದಾರೆ.
ಎಐಎಂಎಸ್ಎಸ್(ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ), ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮತ್ತು ಎಐಪಿಡಬ್ಲ್ಯೂಎ(ಅಖಿಲ ಭಾರತ ಪ್ರೋಗ್ರೆಸ್ಸಿವ್ ವಿಮನ್ಸ್ ಅಸೋಸಿಯೇಷನ್) ವತಿಯಿಂದ ದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನು ಖಂಡಿಸಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ಹೆಚ್ಚುತ್ತಲೇ ಇವೆ. ಉತ್ತರಪ್ರದೇಶದ ಹತ್ರಸ್ನಲ್ಲಿ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಇಂತಹ ಘಟನೆಗಳು ನಡೆದಾಗ ಹೆಣ್ಣುಮಕ್ಕಳ ಉಡುಗೆ, ಅವರ ವರ್ತನೆಯನ್ನೇ ದೂಷಿಸಲಾಗುತ್ತದೆ. ಈ ಮನೋಭಾವ ಬದಲಾಗಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಗೌರಮ್ಮ ಮಾತನಾಡಿ, ಹತ್ರಸ್ ಪ್ರಕರಣದ ನಂತರ ಉತ್ತರಪ್ರದೇಶ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಳ್ಳದೆ ಅತ್ಯಾಚಾರಿಗಳನ್ನು ರಕ್ಷಿಸುವ ಹುನ್ನಾರವೂ ನಡೆದಿದೆ. ಸರಣಿಯಾಗಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯದ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೊರೋನ ಹಿನ್ನೆಲೆಯಲ್ಲಿ ಇಂತಹ ಪ್ರಕರಣಗಳು ಹಿನ್ನೆಲೆ ಸರಿಯುತ್ತಿವೆ. ಸರಕಾರಗಳು ಇದರ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅಖಿಲ ಭಾರತ ಪ್ರೊಗ್ರೆಸ್ಸಿವ್ ವಿಮೆನ್ಸ್ ಅಸೋಸಿಯೇಷನ್ನ ಶಿಲ್ಪಾ ಮಾತನಾಡಿ, ಇಂತಹ ಘಟನೆಗಳು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗಿಲ್ಲ. ಹೆಣ್ಣುಮಕ್ಕಳನ್ನು ಭೋಗದ ವಸ್ತುವಿನಂತೆ ನೋಡುವ ದೃಷ್ಟಿಕೋನ ಬದಲಾಗಬೇಕು. ಆಗ ಮಾತ್ರ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದರು. ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಐಎಂಎಸ್ಎಸ್ ಬೆಂಗಳೂರು ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯೆ ಸಿಂಧೂ ವಹಿಸಿಕೊಂಡಿದ್ದರು.
ಬೇಡಿಕೆಗಳು
1. ಹತ್ರಸ್ ಅತ್ಯಾಚಾರ, ಸಾವು ಪ್ರಕರಣದ ನಿಷ್ಪಕ್ಷ ವಿಚಾರಣೆಗಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕು.
2. ಹತ್ರಸ್ ಅತ್ಯಾಚಾರ ಸಂತ್ರಸ್ತೆಯ ಗುಂಪು ಅತ್ಯಾಚಾರ ಮತ್ತು ಮರಣಕ್ಕೆ ಕಾರಣರಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ಖಾತರಿಗೊಳಿಸಬೇಕು.
3. ಸಂತ್ರಸ್ತೆಯ ಮರಣದ ಮುನ್ನ ಹಾಗೂ ನಂತರ ಅಪರಾಧಿಗಳೊಂದಿಗೆ ಶಾಮೀಲಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳಿಗೆ ಕಠಿಣ ಶಿಕ್ಷೆಗೆ ಗುರಿಮಾಡಬೇಕು.
4. ಉತ್ತರ ಪ್ರದೇಶ ಸೇರಿದಂತೆ ದೇಶದಲ್ಲಿ ಮಹಿಳೆಯರ ಜೀವ ಹಾಗೂ ಘನತೆಯನ್ನು ರಕ್ಷಿಸಲು ಕಠಿಣಕ್ರಮ ಕೈಗೊಳ್ಳಬೇಕು.