ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಪತ್ತೆಗೆ ಶೋಧ
ಬೆಂಗಳೂರು, ನ.1: ಡಿಜೆ-ಕೆಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ನಾಪತ್ತೆ ಆರೋಪಕ್ಕೆ ಸಿಲುಕಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್ರಾಜ್ ಪತ್ತೆಗಾಗಿ ಸಿಸಿಬಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಹಿನ್ನೆಲೆ ಕಳೆದೆರಡು ತಿಂಗಳಿನಿಂದ ಸಂಪತ್ ರಾಜ್ಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಇದರ ನಡುವೆ ಎರಡು ಬಾರಿ ಬಿಡುಗಡೆ ಮಾಡಿದ್ದರು. ಆದರೂ, ಸಂಪತ್ ರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಲ್ಲಿನ ವೈದ್ಯಕೀಯ ಸಿಬ್ಬಂದಿ ತನಿಖಾಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿದ್ದರು ಎಂದು ಹೇಳಲಾಗುತ್ತಿದೆ.
ಇನ್ನು, ಸಂಪತ್ ರಾಜ್ ಆಸ್ಪತ್ರೆಯಲ್ಲಿ ದಾಖಲಾದ ದಿನದಿಂದ ಆರೋಗ್ಯ, ಸಿಸಿಟಿವಿ ಕುರಿತ ಪೂರ್ಣ ಮಾಹಿತಿ ನೀಡುವಂತೆ ಪೊಲೀಸರು ಈಗಾಗಲೇ ಆಸ್ಪತ್ರೆಯ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿನ ತಂಡ ಹೊರ ರಾಜ್ಯಕ್ಕೆ ತೆರಳಿದ್ದು, ಯಾವುದೇ ಕ್ಷಣದಲ್ಲಿ ಸಂಪತ್ ರಾಜ್ ಬಂಧನವಾಗುವ ಸಾಧ್ಯತೆ ಇದೆ.