ಮಾರಕಾಸ್ತ್ರಗಳಿಂದ ದಾಳಿ ನಡೆ ಯುವಕನ ಕೊಲೆ
ಬೆಂಗಳೂರು, ಜ.1: ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ದುಷ್ಕರ್ಮಿಗಳು, ಆತನ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ಜಿ.ಹಳ್ಳಿ ನಿವಾಸಿ ಸುಲ್ತಾನ್ ಪಾಷಾ(25) ಎಂಬಾತ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ.
ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದಿನಗೂಲಿ ಕಾರ್ಮಿಕನಾಗಿದ್ದ ಸುಲ್ತಾನ್ ಪಾಷಾ, ಕೆಲಸ ಮುಗಿಸಿ, ಮನೆಗೆ ತೆರಳುತ್ತಿದ್ದನು. ಈ ವೇಳೆ ರಾಮ್ ಟೆಂಟ್ ರಸ್ತೆಯಲ್ಲಿ ಈತನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಲ್ತಾನ್ ಪಾಷಾನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಸುಲ್ತಾನ್ ಮೃತಪಟ್ಟಿದ್ದಾನೆ. ಕೃತ್ಯ ನಡೆದ ಸ್ಥಳದಲ್ಲಿನ ಸಿಸಿ ಕ್ಯಾಮರಾ ಪರಿಶೀಲಿಸಲಾಗಿದ್ದು, ಆರೋಪಿಗಳ ಮುಖಚಹರೆಯ ಗುರುತು ಪತ್ತೆಯಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.