ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ
ಬೆಂಗಳೂರು: ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಗ್ಧ ಹೆಣ್ಣುಮಗಳಿಗೆ ಅನ್ಯಾಯವೆಸಗಿ, ಕೆಲಸದ ಆಸೆಯಿಂದ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರನ್ನೇ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಆರೋಪಿಸಿ, ಕೃತ್ಯವನ್ನು ಖಂಡಿಸಿದ ಕಾಂಗ್ರೆಸ್, ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿತು.
ಮಂಗಳವಾರ ಮೌರ್ಯ ವೃತ್ತದಲ್ಲಿನ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸತ್ಯಾಗ್ರಹ ನಡೆಸಿದರು.
ಕೂಡಲೇ ಇವರನ್ನು ಪಕ್ಷದಿಂದ ಅಮಾನತುಗೊಳಿಸಿ, ಸಚಿವ ಸಂಪುಟದಿಂದ ವಜಾಗೊಳಿಸದೇ ಇದ್ದರೆ, ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರಮೇಶ್ ಜಾರಕಿಹೊಳಿ ಮೇಲಿನ ಆರೋಪದ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದೇ ಹೋದರೆ ಮುಖ್ಯಮಂತ್ರಿ ಕಚೇರಿ ಮುಂದೆ ಧರಣಿ ನಡೆಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತೇವೆ ಎಂದು ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ತಿಳಿಸಿದೆ.
ಕಾಂಗ್ರೆಸ್ ಮುಖಂಡರುಗಳಾದ ಎಸ್ ಮನೋಹರ್, ಜಿ. ಜನಾರ್ಧನ್, ಎ ಆನಂದ್, ಈ. ಶೇಖರ್, ಎಂ. ಎ. ಸಲೀಂ ಪುಟ್ಟರಾಜು, ಪ್ರಕಾಶ್ ಮಹೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.