ಬೆಂಗಳೂರು: ಆಸ್ಪತ್ರೆಗಳಿಗೆ ಅಲೆದಾಡಿ ಕೊನೆಗೆ ರಸ್ತೆಯಲ್ಲೇ ಪ್ರಾಣ ಬಿಟ್ಟ ಕೋವಿಡ್ ರೋಗಿ
ಬೆಂಗಳೂರು, ಎ.20: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಅಧಿಕಗೊಳ್ಳುತ್ತಿದ್ದಂತೆ ಹೃದಯ ವಿದ್ರಾವಕ ಘಟನೆಗಳು ವರದಿಯಾಗುತ್ತಿದ್ದು, ಮಂಗಳವಾರವೂ ಕೋವಿಡ್ ರೋಗಿಯೊಬ್ಬರು ಉಸಿರಾಟ ಸಮಸ್ಯೆಯಿಂದ ರಸ್ತೆಯಲ್ಲಿಯೇ ನರಳಾಡಿ ಸಾವನ್ನಪ್ಪಿದ್ದಾರೆ.
ಇಲ್ಲಿನ ಕಮಲಾನಗರದ ಮಾರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ 40 ವರ್ಷದ ವ್ಯಕ್ತಿ ತೀವ್ರ ಉಸಿರಾಟ ತೊಂದರೆಯಿಂದ ಅಸ್ವಸ್ಥರಾಗಿ ಬಿದ್ದಿದ್ದರು. ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿ ಅವರನ್ನು ಮಲ್ಲೇಶ್ವರದ ಆಸ್ಪತ್ರೆಗೆ ವರ್ಗಾಯಿಸಿದ್ದರು. ಆದರೆ, ಇಲ್ಲಿ ಹಾಸಿಗೆ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಮತ್ತೊಂದು ಆಸ್ಪತ್ರೆಗೆ ತೆರಳಿದ್ದಾರೆ. ಬಳಿಕ ಅಲ್ಲಿಂದ ಇನ್ನೊಂದು ಆಸ್ಪತ್ರೆಗೆ ಹೋದಾಗ ಅಲ್ಲಿ ಚಿಕಿತ್ಸೆಗೆ ದಾಖಲು ಮಾಡಿಕೊಳ್ಳಲಾಯಿತು. ಆದರೆ ವ್ಯಕ್ತಿಯ ಪರಿಸ್ಥಿತಿ ಗಂಭೀರತೆ ತಲುಪಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉಸಿರಾಟದ ಸಮಸ್ಯೆಯಿಂದ ತೀವ್ರವಾಗಿ ಬಳಲುತ್ತಿದ್ದ ಅವರು, ಕಳೆದ ಎರಡು ದಿನಗಳಿಂದ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದರು. ಆದರೆ, ಹಾಸಿಗೆ ವ್ಯವಸ್ಥೆಯಿಲ್ಲದ ಕಾರಣ ಮಂಗಳವಾರವೂ ಆಸ್ಪತ್ರೆಗಾಗಿ ಅಲೆದಾಡಿದ್ದಾರೆ ಎಂದು ಹೇಳಲಾಗುತ್ತಿದೆ.