ನಿವೃತ್ತ ಅಧಿಕಾರಿ ಸೈಯದ್ ಬಶೀರ್ ಅಹ್ಮದ್ ನಿಧನ
ಬೆಂಗಳೂರು: ರಾಜ್ಯ ಸರಕಾರದ ನಿವೃತ್ತ ಅಧೀನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲೆಯ ಅಲ್ ಮಹ್ಮೂದ್ ಎಜುಕೇಷನ್ ಸೊಸೈಟಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಸೈಯದ್ ಬಶೀರ್ ಅಹ್ಮದ್ ಅವರು ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ರವಿವಾರ ಖುದ್ದೂಸ್ ಸಾಹೇಬ್ ಖಬರಸ್ಥಾನದಲ್ಲಿ ಅವರ ಅಂತಿಮಸಂಸ್ಕಾರವನ್ನು ನೆರವೇರಿಸಲಾಗಿದೆ.
ಮುಸ್ಲಿಂ ಸಮುದಾಯದ ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ಕೊಡುಗೆಯನ್ನು ನೀಡಿದ್ದ ಸೈಯದ್ ಬಶೀರ್ ಅಹ್ಮದ್, ಸರಕಾರಿ ಸೇವೆಯೊಂದಿಗೆ ಸಾಮಾಜಿಕ ಸೇವಾ ಕಾರ್ಯಗಳ ಚುಟವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು.
ಅನೇಕ ಶೈಕ್ಷಣಿಕ ಸಂಸ್ಥೆಗಳು, ಸಂಘ ಸಂಸ್ಥೆಗಳ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೈಯದ್ ಬಶೀರ್ ಅಹ್ಮದ್, ಮುಸ್ಲಿಂ ಸಮುದಾಯದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿಯೂ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದ್ದರು.
ನಗರದ ಕಬ್ಬನ್ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ಹಾಗೂ ಹಝ್ರತ್ ಮುಹೀಬ್ ಶಾ ದರ್ಗಾ ಸಮಿತಿಯ ಉಪಾಧ್ಯಕ್ಷರಾಗಿಯೂ ಸೈಯದ್ ಬಶೀರ್ ಅಹ್ಮದ್ ಸೇವೆ ಸಲ್ಲಿಸಿದ್ದರು.