ಬಿಎಸ್ವೈ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆ. 5: ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ರವಿವಾರ ಇಲ್ಲಿನ ಕಾವೇರಿ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಯಡಿಯೂರಪ್ಪ ಅವರೊಂದಿಗೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಸೆ.7ಕ್ಕೆ ಸಿಎಂ ಬೊಮ್ಮಾಯಿ ಅವರು ಹೊಸದಿಲ್ಲಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಬಿಎಸ್ವೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೆಲವು ಪ್ರಮುಖ ನಾಯಕರನ್ನು ಭೇಟಿಯಾಗಲಿರುವ ಬೊಮ್ಮಾಯಿ ಅವರು ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ, ನಿಗಮ-ಮಂಡಳಿಗಳಿಗೆ ನೇಮಕಾತಿ, ಕೆಲವು ಸಚಿವರ ಖಾತೆ ಬದಲಾವಣೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ತೀರ್ಮಾನ ಕೈಗೊಳ್ಳುವ ಕುರಿತು ಚರ್ಚಿಸಲಿದ್ದಾರೆಂದು ಹೇಳಲಾಗಿದೆ. ಆ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರು ಮಾಜಿ ಸಿಎಂ ಬಿಎಸ್ವೈ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ಗೊತ್ತಾಗಿದೆ.