ಕೋವಿಡ್ ಮೂರನೆ ಅಲೆ ಭೀತಿ: ನೆರೆರಾಜ್ಯದ ವಿದ್ಯಾರ್ಥಿಗಳಿಗೆ ನಿರ್ಬಂಧ; ಬಿಬಿಎಂಪಿ ಮುಖ್ಯಆಯುಕ್ತ ಗೌರವ್ ಗುಪ್ತಾ
ಬೆಂಗಳೂರು, ಸೆ.6: ಸಂಭಾವ್ಯ ಕೋವಿಡ್ ಮೂರನೆ ಅಲೆ ಹಿನ್ನೆಲೆ ನೆರೆ ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲು ಗಂಭೀರ ಚಿಂತಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಸದ್ಯದ ಪರಿಸ್ಥಿತಿಯಲ್ಲಿ ನೆರೆಯ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಕೊರೋನ ಸೋಂಕಿತರು ಗಣನೀಯವಾಗಿ ಏರಿಕೆಯಾಗಿದ್ದು, ಅಲ್ಲಿಂದ ಬೆಂಗಳೂರಿಗೆ ಆಗಮಿಸುವ ವಿದ್ಯಾರ್ಥಿಗಳನ್ನು ಕೆಲ ಕಾಲ ನಿರ್ಬಂಧ ಹೇರಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಕೋವಿಡ್ ಉಲ್ಬಣ ಕಾರಣದಿಂದಾಗಿ ನಗರದ ಎರಡು ನಸಿರ್ಂಗ್ ಕಾಲೇಜು ಸೇರಿದಂತೆ ಐದು ವಿದ್ಯಾರ್ಥಿ ವಸತಿ ಗೃಹಗಳನ್ನು ಈಗಾಗಲೇ ಕಂಟೋನ್ಮೆಂಟ್ ವಲಯ ಎಂದೂ ಗುರುತಿಸಿ, ಕಟ್ಟೆಚ್ಚರ ವಹಿಸಲಾಗಿದೆ ಎಂದು ವಿವರಿಸಿದರು.
ಕೊರೋನದಿಂದಾಗಿ ನಾವು ಕಾಪಾಡಿಕೊಳ್ಳಲು ಮಾಸ್ಕ್ ಸೇರಿದಂತೆ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಅಲ್ಲದೆ, ಹಬ್ಬಗಳ ಆಚರಣೆ ಸಂದರ್ಭದಲ್ಲಿ ಗುಂಪು ಗುಂಪಾಗಿ ಸೇರದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಗುಪ್ತ ಸಲಹೆ ಮಾಡಿದರು.