ಕುಲಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಐಎಎಸ್ ಅಧಿಕಾರಿ
ಬೆಂಗಳೂರು, ಡಿ.4: ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಂ.ಕೊಟ್ರೇಶ್ ಅನಧಿಕೃತವಾಗಿ ಪ್ರವೇಶಿಸಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ಜ್ಯೋತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಐಎಎಸ್ ಅಧಿಕಾರಿ ಜ್ಯೋತಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ನಡುವೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್), ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಂ.ಕೊಟ್ರೇಶ್ ಅವರನ್ನು ಇವರ ಸ್ಥಾನಕ್ಕೆ ನೇಮಿಸಿತ್ತು.
ಆದರೆ, ಜ್ಯೋತಿ ಅವರು ಅಧಿಕಾರ ಹಸ್ತಾಂತರಿಸದಿದ್ದರೂ ಕೊಟ್ರೇಶ್ ಅವರು ಇವರ ಕಚೇರಿಗೆ ಅನಧಿಕೃತವಾಗಿ ಪ್ರವೇಶಿಸಿ ಕರ್ತವ್ಯ ನಿರ್ವಹಿಸಿದ್ದರಿಂದ ಜ್ಞಾನಭಾರತಿ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಜ್ಯೋತಿ, ನಾನು ಈವರೆಗೂ ಅಧಿಕಾರ ಹಸ್ತಾಂತರಿಸಿಲ್ಲ. ಮುಂದಿನ ಕ್ರಮದ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಸರಕಾರದ ನಿರ್ದೇಶನದ ಮೇರೆಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.
ಜ್ಯೋತಿ ಅವರು ನೀಡಿರುವ ದೂರಿನ ಬಗ್ಗೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.