ಕೆಎಸ್ಸಾರ್ಟಿಸಿಯಲ್ಲಿ ಕಾರ್ಯನಿರ್ವಹಿಸುವ ಸಫಾಯಿ ಕರ್ಮಚಾರಿಗಳಿಗೆ ಸಮವಸ್ತ್ರ ವಿತರಣೆ: ವಿ. ಅನ್ಬುಕುಮಾರ್
ಬೆಂಗಳೂರು, ಮೇ 6: ಕೆಎಸ್ಸಾರ್ಟಿಸಿಯಲ್ಲಿ ಪ್ರಧಾನ ಉದ್ಯೋಗದಾತ ಮತ್ತು ಸಾಮಾಜಿಕ ಹೊಣೆಗಾರಿಕೆಯಡಿ ಕಾರ್ಯನಿರ್ವಹಿಸುತ್ತಿರುವ 299 ಸಫಾಯಿ ಕರ್ಮಚಾರಿಗಳು, ಸ್ವಚ್ಛತಾ ಕೆಲಸಗಾರರು ಹಾಗೂ ಕಾರ್ಮಿಕರಿಗೆ 2 ಜೊತೆ ಸಮವಸ್ತ್ರವನ್ನು ನೀಡುವುದಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಿಸಿದರು.
ಶುಕ್ರವಾರ ಸಭೆಯಲ್ಲಿ ಮಾತನಾಡಿದ ಅವರು, 3 ತಿಂಗಳಿಗೊಮ್ಮೆ ಕಾರ್ಮಿಕರಿಗೆ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗುವುದು. ನಿಗಮದ ವಿಭಾಗ ಮಟ್ಟದ ಕಾರ್ಮಿಕ ಕಲ್ಯಾಣಾಧಿಕಾರಿಗಳು ತಮ್ಮ ವಿಭಾಗದ ವ್ಯಾಪ್ತಿಯ ಬಸ್ಸು ನಿಲ್ದಾಣಗಳಿಗೆ ಆಗ್ಗಿಂದಾಗ್ಗೆ ಭೇಟಿ ನೀಡಿ ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಗುತ್ತಿಗೆದಾರರು ಕಾಲಕಾಲಕ್ಕೆ ಇ.ಎಸ್.ಐ, ಪಿ.ಎಫ್ ಪಾವತಿಸಿರುವ ಬಗ್ಗೆ ಸಂಬಂಧಿಸಿದ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಗಮನವಹಿಸಿ ಪರಾಮರ್ಶೆ ನಡೆಸಬೇಕು ಎಂದರು.
ಸಭೆಯಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ, ಆಯೋಗದ ಕಾರ್ಯದರ್ಶಿ ಚಂದ್ರಕಲಾ, ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ರಮೇಶ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.