ಡಾ.ಅಂಬೇಡ್ಕರ್ ಅಭಿವೃದ್ಧಿನಿಗಮಕ್ಕೆ ದಿಢೀರ್ ಭೇಟಿ; ಫಲಾನುಭವಿಗಳಿಗೆ ಸೌಲಭ್ಯ ವಿತರಣೆಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಬೆಂಗಳೂರು: ಡಾ.ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಿಢೀರ್ ಭೇಟಿ ನೀಡಿದರು.
ಶನಿವಾರ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಚಿಕ್ಕ ಗೋಪುರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ದಿಢೀರ್ ಭೇಟಿ ನೀಡಿದ ಅವರು ಅಧಿಕಾರಿ, ಸಿಬ್ಬಂದಿ ಹಾಜರಾತಿಯಿಂದ ಹಿಡಿದು ವಿವಿಧ ವಿಷಯಗಳ ಪರಿಶೀಲನೆ ನಡೆಸಿದರು.
ಇಲಾಖೆಯ ವಿವಿಧ ಅಭಿವೃದ್ಧಿ ನಿಗಮಗಳ ಕಾರ್ಯವೈಖರಿಯನ್ನು ಖುದ್ಧು ಪರಿಶೀಲಿಸುವ ಹಾಗೂ ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಈ ದಿಢೀರ್ ಭೇಟಿ ನೀಡಲಾಗಿದ್ದು, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಾರ್ಯವೈಖರಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಆದರೆ, ಭೂಒಡೆತನ ಯೋಜನೆಯಲ್ಲಿನ ಗೊಂದಲ ಬಗೆಹರಿಸುವ ಬಗ್ಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ವಿದ್ಯುದ್ದೀಕರಣದ ಬಗ್ಗೆ ಕ್ಷಿಪ್ತ ಕ್ರಮ ವಹಿಸುವ ಬಗ್ಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎ.ಸುರೇಶ್ ಕುಮಾರ್ ಅವರಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ಕೆ.ರಾಕೇಶ್ ಕುಮಾರ್ ಈ ಸಂದರ್ಭ ಉಪಸ್ಥಿತರಿದ್ದರು.