ಈದ್ಗಾ ಆಟದ ಮೈದಾನದಲ್ಲಿ ಸಂಭ್ರಮ: ಝಮೀರ್ ಅಹ್ಮದ್ ಖಾನ್
ಬೆಂಗಳೂರು, ಆ.15: ನನ್ನ ಪಾಲಿಗೆ ಇಂದು ಅವಿಸ್ಮರಣೀಯ ದಿನ. ಚಾಮರಾಜಪೇಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಈದ್ಗಾ ಆಟದ ಮೈದಾನದಲ್ಲಿ ಅತ್ಯಂತ ಸಂಭ್ರಮ, ಸಡಗರದಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿದ್ದು ನನಗೆ ಹರ್ಷ ತಂದಿದೆ ಎಂದು ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ಗಳನ್ನು ಮಾಡಿರುವ ಅವರು, ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಎಲ್ಲಾ ಮಹಾನ್ ಚೇತನಗಳನ್ನು ಸ್ಮರಿಸಿದೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.
ಮಕ್ಕಳಿಂದ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಕುರಿತ ನಾಟಕ, ‘ಝಂಡಾ ಊಂಚಾ ರಹೇ ಹಮಾರ' ಸಾಮೂಹಿಕ ದೇಶಭಕ್ತಿ ಗೀತೆ ಮುಂತಾದ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂತಸದ ಕ್ಷಣದಲ್ಲಿ ನನ್ನೊಂದಿಗೆ ಭಾಗಿಯಾದ ಎಲ್ಲಾ ಗಣ್ಯರಿಗೆ, ಪುಟಾಣಿ ಮಕ್ಕಳಿಗೆ ಧನ್ಯವಾದಗಳು ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.