ಬೆಂಗಳೂರು | ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಬೆಂಗಳೂರು, ಆ.18: ಕ್ಯಾನ್ಸರ್ ರೋಗ ಪತ್ತೆಯಾದ ಹಿನ್ನೆಲೆ ಬಿಬಿಎಂಪಿ ಗುತ್ತಿಗೆ ನೌಕರ ಸೇರಿದಂತೆ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋಣನಕುಂಟೆಯ ಚುಂಚನಕಟ್ಟೆ ಎಸ್ಬಿಐ ಲೇಔಟ್ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆಗೆ ಮಾಡಿಕೊಂಡಿರುವುದಾಗಿ ಗುರುತಿಸಲಾಗಿದೆ.
ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಮಹೇಶ್ ಮೂಲತಃ ಮಳವಳ್ಳಿಯವರಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇನ್ನೂ, ಮನೆಯ ಕೊಠಡಿಯಲ್ಲಿ ಮಹೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಮತ್ತೊಂದು ಕೊಠಡಿಯಲ್ಲಿ ಜ್ಯೋತಿ ಹಾಗೂ ಮಗ ನಂದೀಶ್ ವಿಷ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸಾವಿಗೂ ಮುನ್ನ ಅನಾರೋಗ್ಯದಿಂದ ಈ ರೀತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿರುವ ಡೆತ್ನೋಟ್ ಪತ್ತೆಯಾಗಿದೆ. ಮಧ್ಯಮ ವರ್ಗದ ಕುಟುಂಬಸ್ಥರಾಗಿರುವ ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಇಂದು ಆಸ್ಪತ್ರೆಗೆ ತೆರಳಿದ್ದರು. ವೈದ್ಯಕೀಯ ತಪಾಸಣೆ ವೇಳೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ.ಇದರಿಂದ ಆತಂಕಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನೆ ಸಂಬಂಧ ಮೂವರ ಮೃತದೇಹಗಳನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.