ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಅವಾಂತರ: ಕೇಂದ್ರ ಹೆದ್ದಾರಿ ಸಚಿವರಿಗೆ ಸಿಎಂ ದೂರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳು ಹಾಗೂ ಬೆಂಗಳೂರು ನಗರ ಸುಗಮ ಸಂಚಾರದ ಕುರಿತು ಚರ್ಚಿಸಿದರು. ಕೇಂದ್ರ ಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ.ಸಿಂಗ್, ರಾಜ್ಯ ಸಾರಿಗೆ ಸಚಿವ ಶ್ರೀರಾಮುಲು ಜೊತೆಗಿದ್ದರು.
ಬೆಂಗಳೂರು, ಸೆ.9: ಇತ್ತೀಚೆಗೆ ಸುರಿದ ಮಹಾಮಳೆಯ ವೇಳೆ ಅವಾಂತರಕ್ಕೆ ಕಾರಣವಾಗಿದ್ದ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ದಶಪಥ ಹೆದ್ದಾರಿ ಕಾಮಗಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ದೂರು ನೀಡಿದ್ದಾರೆ.
ಕೇಂದ್ರ ಭೂಸಾರಿಗೆ ಸಚಿವಾಲಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಗುರುವಾರ ಇಲ್ಲಿ ಆಯೋಜಿಸಿದ್ದ ‘ಮಂಥನ' ಕಾರ್ಯಕ್ರಮದ ವೇಳೆ ಬೊಮ್ಮಾಯಿ ಅವರು ಗಡ್ಕರಿ ಜತೆ ಪ್ರತ್ಯೇಕವಾಗಿ ಈ ಕುರಿತು ಮಾತುಕತೆ ನಡೆಸಿದರು. ಇತ್ತೀಚೆಗೆ ಸುರಿದ ಮಳೆಗೆ ಈ ರಸ್ತೆಯ ಕೆಲವೆಲ್ಲ ಹುಳುಕುಗಳು ಬೆಳಕಿಗೆ ಬಂದಿವೆ. ರಸ್ತೆ ಮತ್ತು ಚರಂಡಿ ಕುರಿತಂತೆ ಎದ್ದಿರುವ ತಕರಾರಿನ ಕುರಿತು ಮುಖ್ಯಮಂತ್ರಿ ಹೆದ್ದಾರಿ ಸಚಿವರ ಗಮನ ಸೆಳೆದರು.
ಈ ಹೆದ್ದಾರಿ ರಾಜ್ಯದ ಪ್ರತಿಷ್ಠಿತ ಯೋಜನೆಯಾಗಿದ್ದು, ಇದರ ಕಾಮಗಾರಿಯಲ್ಲಿ ಯಾವುದೇ ಲೋಪವಾಗಿದ್ದರೂ ಅದನ್ನು ಈಗಲೇ ಸರಿಪಡಿಸಬೇಕು. ಇತ್ತೀಚೆಗೆ ಬಿದ್ದ ಮಳೆ ಸಂದರ್ಭ ಕೆಲವು ಸಮಸ್ಯೆಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಅಗತ್ಯ ಬದಲಾವಣೆಗಳನ್ನು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಮಾಡಬೇಕು. ಈ ಬಗ್ಗೆ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಬೇಕು. ರಸ್ತೆ, ಚರಂಡಿ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಈ ಹೆದ್ದಾರಿ ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜೀ ಇಲ್ಲ. ಲೋಪಗಳನ್ನು ಸರಿಪಡಿಸಿ, ಅತ್ಯುತ್ತಮ ಹೆದ್ದಾರಿಯನ್ನೇ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಎಕ್ಸ್ಪ್ರೆಸ್ ಹೆದ್ದಾರಿಯುದ್ದಕ್ಕೂ ಎರಡೂ ಬದಿಗಳಲ್ಲಿ ಮಳೆ ನೀರಿನ ಒಳಚರಂಡಿ ವ್ಯವಸ್ಥೆಯಲ್ಲಿ ತೊಡಕುಗಳಿರುವುದು ಇತ್ತೀಚಿನ ಭಾರೀ ಮಳೆ ಸಂದರ್ಭ ಗೊತ್ತಾಗಿದೆ. ಈ ಬಗ್ಗೆ ಪರಿಶೀಲಿಸಿ ಅಂದಾಜು ಮಾಡಿ ಅದಕ್ಕೆ ಪೂರಕವಾಗಿ ಒಳಚರಂಡಿ ವ್ಯವಸ್ಥೆಗೆ ಹೊಸ ಯೋಜನೆ ರೂಪಿಸಿ, ಜಾರಿಗೊಳಿಸಬೇಕು ಎಂದು ಗಡ್ಕರಿ ಅಧಿಕಾರಿಗಳಿಗೆ ಸೂಚಿಸಿದರು.
ಕೇಂದ್ರ ಮತ್ತು ರಾಜ್ಯಗಳ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ಸಾಕಷ್ಟು ಲೋಪಗಳಿವೆ ಎಂದು ವಿರೋಧ ಪಕ್ಷಗಳು, ಸಾರ್ವಜನಿಕರು ಆಕ್ಷೇಪ ಎತ್ತಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ಈ ಹೆದ್ದಾರಿ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ರಾಮನಗರದ ಹೊರವಲಯದಲ್ಲಿ ಹಾದು ಹೋಗುವ ಎಕ್ಸ್ಪ್ರೆಸ್ ಹೆದ್ದಾರಿಯ ಅಂಡರ್ಪಾಸ್ನಲ್ಲಿ ನೀರು ತುಂಬಿದ್ದರಿಂದ ಕೃತಕ ನೆರೆ ಸೃಷ್ಟಿಯಾಗಿತ್ತು. ರಸ್ತೆಗಳು, ಬಡಾವಣೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದರು. ಈ ನಡುವೆ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ದೂರು ಸಲ್ಲಿಸಿರುವುದು ಗಮನಾರ್ಹ.