ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆ.9: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವುದು ಸೇರಿದಂತೆ ರಾಮನಗರ, ಕನಕಪುರ, ಚನ್ನಪಟ್ಟಣ ಹಾಗೂ ಇನ್ನಿತರೆಡೆ ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಮನವರಿಕೆ ಮಾಡಿಕೊಟ್ಟಿತು.
ಶುಕ್ರವಾರ ನಗರದ ಖಾಸಗಿ ಹೊಟೇಲ್ನಲ್ಲಿ ನಿತಿನ್ ಗಡ್ಕರಿಯನ್ನು ಭೇಟಿಯಾದ ಡಿ.ಕೆ.ಶಿವಕುಮಾರ್, ಇತ್ತೀಚಿನ ಮಳೆಯಿಂದ ಪ್ರವಾಹ ಪರಿಸ್ಥಿತಿ ಏರ್ಪಟ್ಟು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡು, ಜನರ ತೀವ್ರ ಸಂಕಷ್ಟಕ್ಕೆ ಸಾಕ್ಷಿಯಾದ ರಾಮನಗರ, ಚನ್ನಪಟ್ಟಣ, ಮಂಡ್ಯ ಬಳಿಯ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಮನವಿ ಮಾಡಿದರು.
ಅಲ್ಲದೆ, ಕನಕಪುರ ಸಮೀಪ ಅರ್ಕಾವತಿ ನದಿಗೆ ಪರ್ಯಾಯ ಸೇತುವೆ ನಿರ್ಮಾಣ ಹಾಗೂ ಕನಕಪುರ ನಗರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರಿಗೆ ಶಿವಕುಮಾರ್ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ.ಸುರೇಶ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಅವಾಂತರ: ಕೇಂದ್ರ ಹೆದ್ದಾರಿ ಸಚಿವರಿಗೆ ಸಿಎಂ ದೂರು
ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ಶ್ರೀ @Nitin_Gadkari ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಅರ್ಕಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಹಳೆಯ ಸೇತುವೆ ಮಳೆಯಿಂದಾಗಿ ಹಾನಿಯಾಗಿರುವ ಬಗ್ಗೆ ವಿವರಿಸಿ, ಈಗಿರುವ ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದೆ.
— DK Shivakumar (@DKShivakumar) September 9, 2022
1/2 pic.twitter.com/4qJSJyD1iK