ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು?: ಸಿದ್ದರಾಮಯ್ಯರಿಗೆ ಸಚಿವ ಬಿ.ಸಿ.ನಾಗೇಶ್ ಪ್ರಶ್ನೆ
ಟ್ವೀಟ್ ವಾಕ್ಸಮರ
ಬೆಂಗಳೂರು, ಸೆ.11: ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(B.C.Nagesh, Minister of School Education) ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah, Leader of Opposition, Karnataka Legislative Assembly) ನಡುವಿನ ಟ್ವೀಟ್(Tweet) ವಾಕ್ಸಮರ ಮುಂದುವರಿದಿದೆ. ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಸಿದ್ದರಾಮಯ್ಯರ ವಿರುದ್ಧವೂ ಕೆಲವೊಂದು ಪ್ರಶ್ನೆಗಳನ್ನು ಮುಂದಿಟ್ಟು ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ.
ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರುಪ್ಸಾ) ಪ್ರಧಾನಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಇದರಲ್ಲಿ ಸಚಿವ ಬಿ.ಸಿ.ನಾಗೇಶ್ ಅವರ ಪಾಲೆಷ್ಟು ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ಸಚಿವ ನಾಗೇಶ್, ನಿಮ್ಮ ಸರಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ನಿಮ್ಮ ಪಾತ್ರ ಏನು? ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಅಗ್ನಿಪಥ್ ಯೋಜನೆ; ವಿವರ ಬಹಿರಂಗಪಡಿಸಲು ನಿರಾಕರಿಸಿದ ರಕ್ಷಣಾ ಸಚಿವಾಲಯ
ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಎಂದು ಸಿದ್ದರಾಮಯ್ಯರನ್ನು ಕುಟುಕಿದ್ದಾರೆ.
2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ! ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ನಿಮಗೆ ಕಾಳಜಿ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿಯನ್ನು ಪ್ರಶ್ನಿಸಿರುವ ಶಿಕ್ಷಣ ಸಚಿವ, ಖಾಸಗಿ ಶಾಲೆ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್ಲೈನ್ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ ಸಿದ್ದರಾಮಯ್ಯ ಪಾಲೆಷ್ಟು? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ @siddaramaiah ಪಾತ್ರ ಏನು? (1/4) #ಭ್ರಷ್ಟಕಾಂಗ್ರೆಸ್ https://t.co/PnbzcLqeQR
— B.C Nagesh (@BCNagesh_bjp) September 11, 2022