ಬೆಂಗಳೂರು: ಮಕ್ಕಳ ಕಳ್ಳನೆಂದು ಭಾವಿಸಿ ಯುವಕನ ಹತ್ಯೆ
ಬೆಂಗಳೂರು, ಅ.7: ಮಕ್ಕಳ ಕಳ್ಳನೆಂದು ಭಾವಿಸಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಜಾರ್ಖಂಡ್ ಮೂಲದ ಸಂಜಯ್ ತುಡು(33) ಎಂದು ಗುರುತಿಸಲಾಗಿದೆ.
ನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಂಜಯ್ನನ್ನು ಮಕ್ಕಳ ಕಳ್ಳನೆಂದು ಭಾವಿಸಿ ಸ್ಥಳೀಯರು ಥಳಿಸಿದ್ದರು. ಇದರಿಂದ ತೀವ್ರ ಗಾಯಗೊಂಡು ಸಂಜಯ್ ಮೃತಪಟ್ಟಿದ್ದಾರೆ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಯುವಕನ ಮೇಲೆ ಹಲ್ಲೆ ನಡೆಸಿದ ಸಾರ್ವಜನಿಕರ ವಿರುದ್ಧ 302(ಕೊಲೆ) ಪ್ರಕರಣ ದಾಖಲಿಸಿಕೊಂಡು, ಸ್ಥಳದಲ್ಲಿದ್ದ 6 ಮಂದಿಯನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ ಎಂದು ಗಿರೀಶ್ ಹೇಳಿದ್ದಾರೆ. ಮಕ್ಕಳ ಕಳ್ಳರು ಬಂದಿದ್ದಾರೆಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರಿಂದಾಗಿ ಅಮಾಯಕರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಇಂಥ ಸುದ್ದಿಗಳನ್ನು ಜನರು ನಂಬಬಾರದು. ಇಂಥ ಸುದ್ದಿ ಹಬ್ಬಿಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡ ಕೆ.ಆರ್.ಪುರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.