ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಬಿಜೆಪಿಗರು ಪುರಸ್ಕರಿಸಿದ್ದಾರೆ: ಸಿದ್ದರಾಮಯ್ಯ
-

ಬೆಂಗಳೂರು, ಡಿ.7: ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇಂತಹ ಅಪ ಪ್ರಚಾರವಲ್ಲದೆ ಅವರಾದರೂ ಬೇರೆ ಏನು ಮಾಡಲು ಸಾಧ್ಯ? ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳ ಮಸಿ ಬಳಿದುಕೊಂಡ ಮುಖವನ್ನು ತೋರಿಸಿ ಮತ ಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿ ಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ ಎಂದು ವ್ಯಂಗ್ಯವಾಡಿದ್ದಾರೆ.
ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಪಕ್ಷ ಇಂತಹ ನೈತಿಕ ಅಧಃಪತನಕ್ಕೆ ಬಿದ್ದಿರುವುದರ ಬಗ್ಗೆ ನಾವೆಲ್ಲ ಸಾಮೂಹಿಕವಾಗಿ ಸಂತಾಪ ಸೂಚಿಸೋಣ.
'ಸಿದ್ರಮುಲ್ಲಾಖಾನ್' ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಪರ ಪರಂಪರೆ ನಮ್ಮದು. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಸಂತ ರಮಾನಂದರ ಶಿಷ್ಯತ್ವವನ್ನು ಒಪ್ಪಿಕೊಂಡು ಜಗಮೆಚ್ಚಿದ ಸೂಫಿ ಕವಿ ಕಬೀರನೂ ನಮ್ಮದೇ ಪರಂಪರೆಯವರು. ಆದ್ದರಿಂದ ಮುಸ್ಲಿಮ್ ಹೆಸರನ್ನು ನನ್ನ ಹೆಸರಿಗೆ ಜೋಡಿಸುವ ಮೂಲಕ ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಅವರು ಪುರಸ್ಕರಿಸಿದ್ದಾರೆಂದು ಎಂದು ತಿಳಿದುಕೊಳ್ಳುವೆ ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ', ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಮ್ ಸಮುದಾಯಕ್ಕೆ ನಾನು ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್' ಎಂದು ಕರೆದರೆ ಅದಕ್ಕೂ ಖುಷಿಪಡುವೆ ಎಂದ ಸಿದ್ದರಾಮಯ್ಯ, ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ದತೆಯಿಂದ ನಾನು ಮುಸ್ಲಿಮ್ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ. ಭಾರತೀಯ ಜನತಾ ಪಕ್ಷದ ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ.
ಮುಸ್ಲಿಮ್ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ,ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ದವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆಯೂ ಇದೆ, ಅಭಿಮಾನವೂ ಇದೆ ಎಂದು ಹೇಳಿದ್ದಾರೆ.
ಟಿಪ್ಪು ಸುಲ್ತಾನ ಜಯಂತಿ ಆಚರಣೆಯನ್ನೇ ನೆಪವಾಗಿಟ್ಟುಕೊಂಡು ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ಹುಟ್ಟುಹಾಕಿದ ವಿವಾದ ಮತ್ತು ಗಲಭೆಗಳು ರಾಜಕೀಯ ಪ್ರೇರಿತವಾದುದು ಎಂದು ರಾಜ್ಯದ ಜನರಿಗೆ ಈಗ ಮನದಟ್ಟಾಗಿದೆ. ಬಿಜೆಪಿಯ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವ-ಶಾಸಕರ ವರೆಗೆ ಎಲ್ಲರೂ ಬಗೆಬಗೆಯ ವೇಷ ಧರಿಸಿ ಟಿಪ್ಪು ಜಯಂತಿ ಆಚರಿಸಿರುವುದು ಮಾತ್ರವಲ್ಲ, ಟಿಪ್ಪುವನ್ನು ಹಾಡಿ ಹೊಗಳಿದ್ದಕ್ಕೆ ಸಾಕ್ಷಿಗಳಿವೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಟಿಪ್ಪುವಿನ ಬಗ್ಗೆ 400 ಪುಟಗಳ ಪುಸ್ತಕ ಬರೆಸಿದ್ದು ಮಾತ್ರವಲ್ಲ, ಟಿಪ್ಪುವನ್ನು ಕೊಂಡಾಡಿ ಮುನ್ನುಡಿಯನ್ನೂ ಬರೆದಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಡೆದಿದ್ದ ವಿಧಾನಮಂಡಲದ ವಜ್ರ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನನ ಸಾಧನೆಗಳನ್ನು ಉಲ್ಲೇಖಿಸಿ ಶ್ಲಾಘಿಸಿದ್ದರು ಎಂದು ತಿಳಿಸಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಯುವಕರ ಕೊಲೆ ನಡೆದಿತ್ತು ಎಂಬ ಸುಳ್ಳು ಪ್ರಚಾರವನ್ನೂ ಬಿಜೆಪಿ ನಾಯಕರು ನಡೆಸುತ್ತಿದ್ದಾರೆ. ಶೋಭಾ ಕರಂದ್ಲಾಜೆ ರಾಜ್ಯದಲ್ಲಿ 24 ಹಿಂದೂಗಳ ಹತ್ಯೆಗಳು ನಡೆದಿವೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಜೀವಂತವಿದ್ದ ವ್ಯಕ್ತಿಯ ಹೆಸರನ್ನೂ ಸೇರಿಸಲಾಗಿತ್ತು. ಅದರಲ್ಲಿ ಹನ್ನೊಂದು ಹಿಂದೂಗಳ ಹತ್ಯೆಯಲ್ಲಿ ಆರೋಪಿಗಳಾಗಿದ್ದವರು ಎಸ್ ಡಿಪಿಐ ಮತ್ತು ಪಿಎಫ್ ಐ ಸದಸ್ಯರು. ಅವರ ವಿರುದ್ದ ನಮ್ಮದೇ ಸರ್ಕಾರ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಿತ್ತು. ಅವರಲ್ಲಿ ಪರೇಶ್ ಮೇಸ್ತಾ ಎಂಬ ಯುವಕನ ಸಾವು ಹತ್ಯೆಯಲ್ಲ ಎಂದು ಸಿಬಿಐ ಇತ್ತೀಚೆಗೆ ಹೇಳಿದೆ. ಉಳಿದ ಹತ್ಯೆಗಳು ನಡೆದಿದ್ದು ವೈಯಕ್ತಿಕ ದ್ವೇಷ-ಜಗಳಗಳಿಂದ ಎಂದು ತನಿಖೆಯಿಂದ ಗೊತ್ತಾಗಿದೆ. ಇದೇ ಅವಧಿಯಲ್ಲಿ 11 ಮುಸ್ಲಿಮ್ ಯುವಕರ ಹತ್ಯೆಯೂ ನಡೆದಿತ್ತು. ಈ ಹತ್ಯೆಗಳ ಎಲ್ಲ ಆರೋಪಿಗಳು ಬಜರಂಗದಳ ಮತ್ತಿತರ ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರಾಗಿದ್ದಾರೆ. ಅವರ ವಿರುದ್ದವೂ ನಮ್ಮ ಸರ್ಕಾರ ಪ್ರಕರಣಗಳನ್ನು ದಾಖಲಿಸಿತ್ತು. ಈ ಪ್ರಕರಣಗಳ ಸಮಗ್ರ ಮಾಹಿತಿಯನ್ನು ನಮ್ಮ ಸರ್ಕಾರದಲ್ಲಿ ಗೃಹಸಚಿವರಾಗಿದ್ದ ರಾಮಲಿಂಗ ರೆಡ್ಡಿಯವರು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ. ಅದನ್ನು ಬಿಜೆಪಿ ಕಚೇರಿಗೆ ಕಳಿಸಿಕೊಡುವ ವ್ಯವಸ್ಥೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕದ ಜನತೆ ಪ್ರಜ್ಞಾವಂತರಿದ್ದಾರೆ, ಸರಿ-ತಪ್ಪುಗಳನ್ನು ಅರ್ಥಮಾಡಿಕೊಳ್ಳುವಷ್ಟು ವಿವೇಕವುಳ್ಳವರಾಗಿದ್ದಾರೆ. ಆದ್ದರಿಂದ ಅಪಪ್ರಚಾರ ನಡೆಸಿದಷ್ಟು ಅಪಪ್ರಚಾರ ನಡೆಸಿದವರು ರಾಜ್ಯದ ಜನರ ಮುಂದೆ ಬೆತ್ತಲಾಗುತ್ತಾರೆ ಎನ್ನುವುದು ನನಗೆ ಗೊತ್ತು. ನನ್ನ ವಿರುದ್ದದ ಅಪಪ್ರಚಾರವನ್ನು ನಿಲ್ಲಿಸಬೇಕೆಂದು ನಾನೇನು ಮನವಿ ಮಾಡುವುದಿಲ್ಲ. ಆದರೆ ಇಂತಹ ಅಪಪ್ರಚಾರಗಳಿಗೆ ಹೆದರಿ ರಾಜ್ಯ ಸರಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಕೋಮುವಾದದ ರಾಜಕಾರಣದ ವಿರುದ್ಧದ ನನ್ನ ಹೋರಾಟವನ್ನು ನಾನು ನಿಲ್ಲಿಸುತ್ತೇನೆ ಎಂದು ತಿಳಿದುಕೊಂಡರೆ ಅದು ಮೂರ್ಖತನ ಅಷ್ಟೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.