ಬಿಬಿಎಂಪಿ, ಸಮಾಜ ಕಲ್ಯಾಣ ಇಲಾಖೆ ಹೆಸರಿನಲ್ಲಿ ವಂಚನೆ: ಆರೋಪಿಗಳ ಬಂಧನ
ಬೆಂಗಳೂರು, ಜ.25 ಬಿಬಿಎಂಪಿ, ಸಮಾಜ ಕಲ್ಯಾಣ ಇಲಾಖೆ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲವನ್ನು ಬೇಧಿಸಿರುವ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ವಿದ್ಯಾರಣ್ಯಪುರದ ಕಾವೇರಿ ಬಡಾವಣೆಯ ಹರ್ಷ(20) ವಿಜಯನಗರದ 1ನೇ ಕ್ರಾಸ್ನ ರೂಪೇಶ್(18) ಬಾಪೂಜಿನಗರದ 3ನೇಕ್ರಾಸ್ನ ಮೋಹನ(20)ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
ವಿದ್ಯಾರಣ್ಯಪುರದ ವ್ಯಕ್ತಿಯೊಬ್ಬರಿಗೆ ಬಂಧಿತರು ಬಿಬಿಎಂಪಿ ಸಮಾಜ ಕಲ್ಯಾಣ ಇಲಾಖೆಯಿಂದ ಎಂದು ಕರೆ ಮಾಡುತ್ತಿದ್ದು ಉಚಿತವಾಗಿ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ನೀಡುತ್ತಿರುವುದಾಗಿ ಹೇಳಿ ನಂಬಿಸಿ, ಅರ್ಜಿ ಶುಲ್ಕ ಇನ್ನಿತರ ಕಾರಣ ನೀಡಿ 40 ಸಾವಿರ ಹಣ ವಸೂಲಿ ಮಾಡಿದ್ದರು ಎನ್ನಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಸಿಮ್ ಕಾರ್ಡಗಳು, ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
Next Story