ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ; ಮಹಾರಾಷ್ಟ್ರ ಸಂಪುಟ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ
ಬೆಂಗಳೂರು, ಮಾ. 16: ‘ಮಹಾರಾಷ್ಟ್ರ ಗಡಿಯಲ್ಲಿನ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತನಾಡಿದಾಗ ಸುಪ್ರೀಂ ಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಲಾಗಿತ್ತು. ಈಗ ಅದರ ಉಲ್ಲಂಘನೆಯಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರ ಸರಕಾರಿರ ಕೂಡಲೇ ತನ್ನ ಆಜ್ಞೆಯನ್ನು ಹಿಂದೆಗೆದುಕೊಳ್ಳಬೇಕು. ಈ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ತರಲಾಗುವುದು. ಈ ರೀತಿಯ ಯೋಜನೆಗಳನ್ನು ನಾವೂ ಪ್ರಕಟಿಸಬಹುದು. ಹಲವಾರು ತಾಲೂಕುಗಳು, ಗ್ರಾ.ಪಂ.ಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಮಹಾರಾಷ್ಟ್ರದ ಸರಕಾರ ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ: ‘ಬೇಸಿಗೆ ಕಾಲದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುತ್ತಿದೆ. ಸಾಧ್ಯತೆಯಿರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ’
-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ