ಲತಾ ಮಂಗೇಶ್ಕರ್ ನಿಧನಕ್ಕೆ ಸಂಸದ ನಳಿನ್ ಕುಮಾರ್ ಸಂತಾಪ
ಮಂಗಳೂರು : ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನವು ಗಾಯನ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ಹಾಡಿದ ‘ಏ ಮೇರೆ ದೇಶ್ ಕೆ ವತನ್ ಕೆ ಲೋಗೊ’, 'ಲಗ್ ಜಾ ಗಲೇ', 'ಯೇ ಗಲಿಯಾನ್ ಯೇ ಚೌಬಾರಾ', 'ಪ್ಯಾರ್ ಕಿಯಾ ತೊ ಡರ್ನಾ ಕ್ಯಾ', 'ಬಾಹೋನ್ ಮೇ ಚಲೇ ಆವೋ', 'ವೀರ್ ಜರಾ'ದ 'ತೇರೆ ಲಿಯೇ' ಮತ್ತು ಇನ್ನೂ ಅನೇಕ ಹಾಡುಗಳು ಜನಪ್ರಿಯವಾಗಿವೆ. ಅಪಾರ ದೇಶಭಕ್ತಿಯನ್ನು ಹೊಂದಿದ್ದ ಅವರು ರಾಷ್ಟ್ರ, ಧರ್ಮಕ್ಕೆ ಹಾಗೂ ಪಕ್ಷಕ್ಕೆ ನೀಡಿದ ಕೊಡುಗೆ ಅಪಾರ ಎಂದರು.
ಇದನ್ನೂ ಓದಿ : ಲತಾ ಮಂಗೇಶ್ಕರ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ
30,000ಕ್ಕೂ ಹೆಚ್ಚು ಹಾಡುಗಳನ್ನು ಅವರು ಹಾಡಿದ್ದಾರೆ. ಭಾರತದ ನೈಟಿಂಗೇಲ್ (ಗಾನ ಕೋಗಿಲೆ) ಎಂದು ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರು ಭಾರತರತ್ನ, ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ ಎಂದು ಅವರು ನೆನಪಿಸಿದ್ದಾರೆ.
ಅವರ ಕುಟುಂಬ, ಅಭಿಮಾನಿಗಳು ಮತ್ತು ಬಂಧುಗಳಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಗಾನಲೋಕವನ್ನಗಲಿದ ಸಂಗೀತ ರತ್ನ
— Nalinkumar Kateel (@nalinkateel) February 6, 2022
ಭಾರತ ಕಂಡ ಮಹಾನ್ ಹಿನ್ನೆಲೆ ಗಾಯಕಿ, ಸಂಗೀತ ವಿಶಾರದೆ, ಭಾರತದ ನೈಟಿಂಗೇಲ್ ಎಂದೇ ಹೆಸರಾದ ಭಾರತರತ್ನ ಲತಾ ಮಂಗೇಶ್ಕರ್ ಅವರು ಅಸೌಖ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/aO5gmGCKvw