ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸಹಿತ 10 ಜಿಲ್ಲೆಗಳ ಅಧ್ಯಕ್ಷರ ನೇಮಕಕ್ಕೆ ತಡೆ
ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ
ಮಂಗಳೂರು, ಎ.10: ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸಹಿತ ರಾಜ್ಯದ 10 ಜಿಲ್ಲೆಗಳ ಅಧ್ಯಕ್ಷರ ನೇಮಕಕ್ಕೆ ವಕ್ಫ್ ಮತ್ತು ಹಜ್ ಸಚಿವೆಯ ಸೂಚನೆಯ ಮೇರೆಗೆ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಡೆಹಿಡಿದು ಆದೇಶಿಸಿದ್ದಾರೆ.
ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ನೇಮಕಗೊಂಡಿದ್ದರು. ಅದರಂತೆ ಎಪ್ರಿಲ್ 8ರಂದು ಅಧಿಕಾರ ಸ್ವೀಕರಿಸಿದ್ದರು. ಇದೀಗ ಅಧಿಕಾರ ಸ್ವೀಕರಿಸಿದ ದಿನದಂದೇ ಮುಂದಿನ ಆದೇಶದವರೆಗೆ ನೇಮಕಾತಿಗೆ ತಡೆ ನೀಡಲಾಗಿದೆ.
ದ.ಕ.ಜಿಲ್ಲೆಯಲ್ಲದೆ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಚಿಕ್ಕಮಗಳೂರು, ರಾಮನಗರ, ಚಿಕ್ಕೋಡಿ, ತುಮಕೂರು, ಚಿಕ್ಕಬಳ್ಳಾಪುರ, ಕೊಪ್ಪಳ, ಬೀದರ್ ಜಿಲ್ಲೆಯ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರ ನೇಮಕವನ್ನೂ ತಡೆಹಿಡಿಯಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ "ದ.ಕ.ಸಹಿತ 10 ಜಿಲ್ಲೆಗಳ ಅಧ್ಯಕ್ಷರ ನೇಮಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಒಂದೆರಡು ದಿನದಲ್ಲಿ ಗೊಂದಲ ನಿವಾರಣೆಯಾಗಲಿದೆ" ಎಂದಿದ್ದಾರೆ.